


ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ.
ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಮಾಧ್ಯಮಗಳಿಗೆ ತಿಳಿಸಿದರು.
ಅಯೋಧ್ಯೆ ರಾಮಮಂದಿರದಲ್ಲಿನ ದೇಣಿಗೆ ಕಳ್ಳತನದ ಆರೋಪ, ನೀಟ್-ಯುಜಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ವಿವಾದಗಳು ಅಧಿವೇಶನದ ಆರಂಭದಿಂದಲೇ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.
ಚರ್ಚೆಗೆ ನಿಗದಿಯಾಗಿರುವ ಪ್ರಮುಖ ಮಸೂದೆಗಳಲ್ಲಿ ‘ವಿದೇಶಿ ಕೊಡುಗೆ(ನಿಯಂತ್ರಣ) ತಿದ್ದುಪಡಿ ಮಸೂದೆ, 2026’ ಸೇರಿದ್ದು, ಇದರ ಚರ್ಚೆಗೆ ನಾಲ್ಕು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ‘ಆದಾಯ ತೆರಿಗೆ(ತಿದ್ದುಪಡಿ) ಮಸೂದೆ, 2026’ ರ ಕುರಿತು ಲೋಕಸಭೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಲಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.








