


ಬಂಟ್ವಾಳ: ಅಮ್ಮುಂಜೆ ನಿವಾಸಿ ವೃದ್ಧೆ ಬೆನಡಿಕ್ಟ್ ಕಾರ್ಲೋ (73) ಅವರನ್ನು ಚಿನ್ನಾಭರಣಕ್ಕಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2021ರ ಜನವರಿ 25ರ ರಾತ್ರಿ ನಡೆದ ಈ ಘಟನೆಯಲ್ಲಿ ವೃದ್ಧೆಯ ಆರೈಕೆ ಮಾಡುತ್ತಿದ್ದ ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23) ಅವರು, ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿದ್ದರು. ಮೊದಲು ವೃದ್ಧೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ ಆರೋಪಿತೆಯು, ಅದರಲ್ಲಿ ಸಫಲರಾಗದಿದ್ದಾಗ ತನ್ನ ಸ್ನೇಹಿತರಾದ ನರಿಕೊಂಬು ನಿವಾಸಿಗಳಾದ ಸತೀಶ ನಾಯಕ್ (28) ಮತ್ತು ಚರಣ್ ಕುಮಾರ್ (31) ಅವರ ಸಹಾಯದಿಂದ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.
ನಂತರ ಸುಮಾರು 61.070 ಗ್ರಾಂ ತೂಕದ ಚಿನ್ನಾಭರಣಗಳು ಅಂದಿನ ಮೌಲ್ಯ ರೂ. 3 ಲಕ್ಷವನ್ನು ಸುಲಿಗೆ ಮಾಡಿ ಸಾಕ್ಷಿ ನಾಶಪಡಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 22/2021 ರಂತೆ BNS ಕಲಂ 302, 392, 120(ಬಿ), 201 ಜೊತೆಗೆ 34 ರ ಅಡಿ ಪ್ರಕರಣ ದಾಖಲಾಗಿತ್ತು.
ಆಗಿನ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಆಗಿನ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮಂಗಳೂರುನಲ್ಲಿ ವಿಚಾರಣೆ ನಡೆದು, ದಿನಾಂಕ 28-07-2026 ರಂದು ನ್ಯಾಯಾಧೀಶರಾದ ಶ್ರೀ ಜಗದೀಶ್ ವಿ.ಎನ್ ಅವರು ಮೂವರು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಸರಕಾರಿ ಅಭಿಯೋಜಕರಾದ ಶ್ರೀಮತಿ ಜ್ಯೋತಿ ಪ್ರಮೋದ್ ನಾಯಕ್ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.








