
ಕಾರ್ಕಳ ಡಿವೈಎಸ್ಪಿ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ಡಿವೈಎಸ್ಪಿ ಎಸ್. ವಿಜಯಪ್ರಸಾದ್, ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್ ಹಾಗೂ ಹೆಡ್ ಕಾನ್ಸ್ಟೇಬಲ್ ಶಿವಾನಂದ ಅವರನ್ನು ಅಮಾನತುಗೊಳಿಸಲಾಗಿದೆ.
ಉಡುಪಿ ಹೆಚ್ಚುವರಿ ಎಸ್ಪಿ ನಡೆಸಿದ ಪ್ರಾಥಮಿಕ ತನಿಖಾ ವರದಿ ಆಧರಿಸಿ ಈ ಶಿಸ್ತುಕ್ರಮ ಕೈಗೊಳ್ಳಲಾಗಿದ್ದು, ಮೇಲಧಿಕಾರಿಗಳ ಅನುಮತಿಯಿಲ್ಲದೆ ಈ ಮೂವರೂ ಕೇಂದ್ರಸ್ಥಾನ ಬಿಟ್ಟು ಹೋಗುವಂತಿಲ್ಲ ಎಂದು ಆದೇಶಿಸಲಾಗಿದೆ.ಕಾರ್ಕಳ ಉಪ ವಿಭಾಗದ ಡಿವೈಎಸ್ಪಿ ಎಸ್. ವಿಜಯಪ್ರಸಾದ್, ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್ ಹಾಗೂ ಹೆಡ್ ಕಾನ್ಸ್ಟೇಬಲ್ ಶಿವಾನಂದ ಅವರನ್ನು ಅಮಾನತುಗೊಳಿಸಿ, ಶಿಸ್ತು ಕ್ರಮಕ್ಕೆ ಸೂಚನೆ ನೀಡಲಾಗಿದೆ.ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪಕ್ಕೆ ಸಂಬಂಧಿಸಿ, ಕರ್ನಾಟಕ ರಾಜ್ಯ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಎಂ.ಎ.ಸಲೀಂ ಅವರು ಹಾಗೂ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್ ಅವರನ್ನು ಪೊಲೀಸ್ ಮಹಾನಿರ್ದೇಶಕ ಪಶ್ಚಿಮ ವಲಯ ಐಜಿಪಿ ಅಮಿತ್ಸಿಂಗ್ ಅವರ ಸೂಚನೆಯಂತೆ ಅಮಾನತುಗೊಳಿಸಲಾಗಿದೆ.
ಕೇಂದ್ರ ಸ್ಥಾನ ಬಿಟ್ಟುಹೋಗುವಂತಿಲ್ಲ:
ಈ ಆದೇಶದಂತೆ ಉಡುಪಿ ಪೊಲೀಸ್ ಅಧೀಕ್ಷಕರ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಟ್ಟುಹೋಗುವಂತಿಲ್ಲ. ಅಮಾನತಿನ ಅವಧಿಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಪ್ರಕಾರ ಶೇ.50 ರಷ್ಟು ಜೀವನದ ಭತ್ಯೆ ಅರ್ಹರಂತೆ ಷರತ್ತು ವಿಧಿಸಲಾಗಿದೆ. ಈ ಮೂವರ ಮೇಲೆ ಬಂದಿರುವ ಲಂಚ ಪ್ರಕರಣಕ್ಕೆ ಸಂಬಂಸಿದಂತೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್ ತನಿಖೆ ನಡೆಸಿ ವರದಿ ಒಪ್ಪಿಸಿದ್ದಾರೆ.
ಜು.28 ರಂದು ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾ ಪೊಲೀಸರ ಖುಲ್ಲಖುಲ್ಲಂ ಲಂಚಾವತಾರ ವಿಡಿಯೋ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಪೊಲೀಸ್ ಅಕಾರಿಗಳು ತಮ್ಮ ಕಚೇರಿಯಲ್ಲಿ ಹಣವನ್ನು ಕೈಯಲ್ಲಿ ಹಿಡಿದುಕೊಂಡಿರುವ ದೃಶ್ಯಾವಳಿ ಸೆರೆಯಾಗಿತ್ತು. ಈ ಬಗ್ಗೆ ಎಲ್ಲೆಡೆ ವ್ಯಾಪಕ ಅಕ್ರೋಶ ವ್ಯಕ್ತವಾಗಿತ್ತು.








