ಹಿಂದೂ ಜಾಗರಣ ವೇದಿಕೆಯಿಂದ ತೀವ್ರ ಖಂಡನೆ



ಮಂಗಳೂರು: ಬಂಟ್ವಾಳದ ಖ್ಯಾತ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರಾದ ಶ್ರೀ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರ ಪೋಸ್ಟ್ ಮಾಡಿರುವುದನ್ನು ಹಿಂದೂ ಜಾಗರಣ ವೇದಿಕೆ, ಮಂಗಳೂರು ಗ್ರಾಮಾಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ.
ಹಿಂದೂ ಜಾಗರಣ ವೇದಿಕೆ ನೀಡಿದ ದೂರಿನ ಪ್ರಕಾರ, ಶ್ರೀ ಅನಿಲ್ ಪಂಡಿತ್ ಅವರು ಹಲವು ವರ್ಷಗಳಿಂದ ಸಮಾಜದ ಎಲ್ಲಾ ವರ್ಗದ ಜನರಿಗೆ ಸೇವಾ ಮನೋಭಾವದಿಂದ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಾ, ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದಾರೆ. ಆಧ್ಯಾತ್ಮಿಕ ಚಿಂತಕರಾಗಿರುವ ಅವರು ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ.
ಆದರೆ, ಕೆಲವರು ಅವರ ಧಾರ್ಮಿಕ ಕಾರ್ಯಗಳಿಂದ ವಿಚಲಿತರಾಗಿ ಅವರ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ವೇದಿಕೆ ಆರೋಪಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೆಲ ಅನ್ಯಮತೀಯ ವ್ಯಕ್ತಿಗಳು ಅವರ ವಿರುದ್ಧ ಮಾನಹಾನಿಕರ ಪೋಸ್ಟ್ಗಳನ್ನು ಹಾಕಿರುವುದು ಕಂಡುಬಂದಿದ್ದು, ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದೆ.
ದೂರನ್ನು ಸ್ವೀಕರಿಸಿ, ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಮಾಜದ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದೂ ಜಾಗರಣ ವೇದಿಕೆ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದೆ.








