
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಹುತೇಕ ಅಂತಿಮ ಹಂತದ ತೀರ್ಮಾನವಾಗಿದ್ದು, ನೂತನ ಸಚಿವರು ಸೋಮವಾರ (ಆಗಸ್ಟ್ 3) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಶೇ.99ರಷ್ಟು ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸೋಮವಾರ ನೂತನ ಸಚಿವರ ಪ್ರಮಾಣವಚನ ನಡೆಯುವುದು ಬಹುತೇಕ ಖಚಿತವಾಗಿದೆ. ಅದಕ್ಕಾಗಿ ರಾಜಭವನದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದು ಹೇಳಿದರು.ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ಜೂನ್ 3ರಂದು ಅಧಿಕಾರಕ್ಕೆ ಬಂದಿದ್ದರೂ, ಸಚಿವ ಸಂಪುಟ ವಿಸ್ತರಣೆ ಹಲವು ವಾರಗಳಿಂದ ವಿಳಂಬವಾಗಿತ್ತು. ಕಳೆದ ಹದಿನೈದು ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮೂರು ಬಾರಿ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದರು.
ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗವಹಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಸಿದರು.ಸಚಿವ ಸ್ಥಾನಕ್ಕೆ ಆಯ್ಕೆಯಾಗುವವರ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಭಾನುವಾರ ಅಥವಾ ಸೋಮವಾರ ಬೆಳಿಗ್ಗೆ ರಾಜ್ಯ ನಾಯಕರಿಗೆ ಅಧಿಕೃತ ಮಾಹಿತಿ ತಲುಪುವ ನಿರೀಕ್ಷೆಯಿದೆ.








