
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳಲ್ಲಿ ರಸ್ತೆಗಳಿಗೆ ನೀರು ನುಗ್ಗಿದ್ದು, ನದಿ ಹಾಗೂ ಹೊಳೆಗಳ ನೀರಿನ ಮಟ್ಟ ಅಪಾಯದ ಮಟ್ಟದತ್ತ ಏರಿಕೆಯಾಗಿದೆ.
ಈ ನಡುವೆ, ಬಂಟ್ವಾಳ ತಾಲೂಕಿನ ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿಯನ್ನು ಪತ್ತೆಹಚ್ಚಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡ ಭಾನುವಾರ ದಿನಪೂರ್ತಿ ಶೋಧ ಕಾರ್ಯಾಚರಣೆ ನಡೆಸಿತು. ಆದರೆ ನದಿಯಲ್ಲಿನ ಭಾರೀ ನೀರಿನ ಹರಿವು ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ವ್ಯಕ್ತಿಯನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.ಸಂಜೆ ವೇಳೆಗೆ ಬೆಳಕು ಕಡಿಮೆಯಾಗಿದ್ದು, ನದಿಯ ಅಪಾಯಕಾರಿ ಹರಿವಿನ ಹಿನ್ನೆಲೆಯಲ್ಲಿ ಇಂದಿನ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೋಮವಾರ (ಆ.3) ಬೆಳಿಗ್ಗೆ ಮತ್ತೆ NDRF ತಂಡದಿಂದ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳ ಸಮೀಪ ಸಾರ್ವಜನಿಕರು ಅನಗತ್ಯವಾಗಿ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.








