
ವಿಟ್ಲ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯುವ ಸಂಘ’ ಯೋಜನೆಯನ್ನು ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುವ ಕುರಿತು ಮಾಹಿತಿ ನೀಡುವ ಸಭೆಯು ಶುಕ್ರವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟೂರು ಅವರ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಮುಖ್ಯಾಧಿಕಾರಿಗಳು ಮಾತನಾಡಿ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4,000 ಜನಸಂಖ್ಯೆಗೆ ಒಂದು ಸಂಘದಂತೆ ಒಟ್ಟು 4 ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.
ಪ್ರತಿ ಸಂಘದಲ್ಲಿ ಕನಿಷ್ಠ 100 ಸದಸ್ಯರು ಇರಬೇಕು. 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಜಾತಿ, ಧರ್ಮ ಭೇದವಿಲ್ಲದೆ ₹10 ಸದಸ್ಯತ್ವ ಶುಲ್ಕ ಪಾವತಿಸಿ ಮೊಬೈಲ್ ಮೂಲಕ ಆನ್ಲೈನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.
ಪ್ರತಿ ಸಂಘಕ್ಕೆ ಸರ್ಕಾರದಿಂದ ಹಂತ ಹಂತವಾಗಿ ₹10 ಲಕ್ಷ ಅನುದಾನ ಬಿಡುಗಡೆಯಾಗಲಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಚಟುವಟಿಕೆಗಳಿಗೆ ಈ ಅನುದಾನವನ್ನು ಬಳಸಿಕೊಳ್ಳಬಹುದು. ಪ್ರತಿ ಸಂಘದಲ್ಲಿ ಮೀಸಲಾತಿ ನಿಯಮದಂತೆ 15 ಸದಸ್ಯರ ಕಾರ್ಯಕಾರಿ ಸಮಿತಿ ರಚಿಸಲಾಗುವುದು. ಸದಸ್ಯತ್ವ ಪಡೆಯುವವರು ಸಂಬಂಧಿತ ವಾರ್ಡ್ ಅಥವಾ ಸಂಘದ ವ್ಯಾಪ್ತಿಯ ಸಾಮಾನ್ಯ ನಿವಾಸಿಗಳಾಗಿರಬೇಕು ಎಂದು ಮಾಹಿತಿ ನೀಡಲಾಯಿತು.ಯೋಜನೆ ಯಶಸ್ವಿಯಾಗಲು ವಾರ್ಡ್ ಸದಸ್ಯರು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯರು, ಶಾಲಾ-ಕಾಲೇಜುಗಳ ಶಿಕ್ಷಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಹಾಗೂ ಲೋಕೇಶ್ ಕಾರ್ಯಕ್ರಮ ನಿರ್ವಹಿಸಿದರು.








