



ಬೆಂಗಳೂರು: ಭ್ರಷ್ಟ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಆಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದ್ದು, ರಾಜೀನಾಮೆವರೆಗೆ ನಮ್ಮ ಪ್ರತಿಭಟನೆ ನಡೆಯಲಿದೆ. ನಮ್ಮ ಹೋರಾಟ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ರಾಜ್ಯದ ಸರ್ಕಾರಿ ಉದ್ಯಾನಗಳು ಮತ್ತು ತೋಟಗಳ ಒಟ್ಟು ಜಾಗದಲ್ಲಿ ಶೇ.5ರಷ್ಟು ಪ್ರದೇಶವನ್ನು ಸಾರ್ವಜನಿಕ ಹಾಗೂ ಇತರೆ ಅಗತ್ಯ ಉದ್ದೇಶಗಳಿಗೆ ಬಳಸಿಕೊಳ್ಳಲು ಅನುಮೋದನೆ ನೀಡಿ ತಿದ್ದುಪಡಿ ಮಸೂದೆಗೆ ಸಂಪುಟ ಸಮ್ಮತಿ ಸೂಚಿಸಿದೆ. ಇದನ್ನೂ ನಾವು ವಿರೋಧಿಸಿದ್ದೇವೆ. ಇದು ರಿಯಲ್ ಎಸ್ಟೇಟ್ ಸರ್ಕಾರ ಎಂಬುದು ಇದರಿಂದ ರಾಜ್ಯದ ಜನರಿಗೆ ತಿಳಿಯಲಿದೆ. ರಿಯಲ್ ಎಸ್ಟೇಟ್ ದಂಧೆ ನಡೆಸಲೆಂದೇ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ ಎಂದು ಆಕ್ಷೇಪಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರವು ಹೈಕಮಾಂಡ್ ಹೊಟ್ಟೆ ತುಂಬಿಸಲು ಎಲ್ಲವನ್ನೂ ಮಾಡುತ್ತಿದೆ. ರಾಜ್ಯವನ್ನು ಎಐಸಿಸಿಯು ಎಟಿಎಂ ಆಗಿ ಮಾಡಿಕೊಂಡಿದೆ. ಇಂಥ ಜನವಿರೋಧಿ, ಬಡವರ ವಿರೋಧಿ ತೀರ್ಮಾನಗಳನ್ನು ಕೈಗೊಳ್ಳುತ್ತಿರುವ ಸರ್ಕಾರದ ನಡೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಖಂಡಿಸಿವೆ. ಸರ್ಕಾರದ ನಿರ್ಧಾರಕ್ಕೆ ಬಲವಾದ ವಿರೋಧ ಇದೆ ಎಂದು ಅವರು ಹೇಳಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.








