
ಮಂಗಳೂರು: ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವ ಆರ್. ಚೇತನ್ ಅವರು ಕೇರಳ ಗಡಿಭಾಗದಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರಡ್ಕ, ಸಾಲೆತ್ತೂರು ಸೇರಿದಂತೆ ಕೇರಳ ಗಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಮಾರ್ಗಗಳಲ್ಲಿರುವ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿದ ಅವರು, ಅಲ್ಲಿನ ಭದ್ರತಾ ವ್ಯವಸ್ಥೆ, ವಾಹನಗಳ ತಪಾಸಣೆ ಹಾಗೂ ಗಡಿಭಾಗದಲ್ಲಿ ಪೊಲೀಸರ ಕಾರ್ಯವೈಖರಿಯನ್ನು ಪರಿಶೀಲಿಸಿದರು.ಕೇರಳದಿಂದ ಕರ್ನಾಟಕಕ್ಕೆ ಅಕ್ರಮ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಟ, ಅಕ್ರಮ ಸರಕು ಸಾಗಣೆ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗಡಿಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಎನ್ನಲಾಗಿದೆ.
ಗಡಿಭಾಗದ ಪ್ರಮುಖ ಸಂಪರ್ಕ ರಸ್ತೆಗಳು ಹಾಗೂ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಮೂಲಕ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಹೊಸ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೇ ಡಿಐಜಿ ಆರ್. ಚೇತನ್ ಅವರು ಗಡಿಭಾಗದ ಪೊಲೀಸ್ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿರುವುದು ಮಹತ್ವ ಪಡೆದಿದೆ.








