
ಮಂಗಳೂರು: ಎಸ್ಐಆರ್ ಗೆ ಸಂಬಂಧಿಸಿದಂತೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಮನೆಗೆ ಅಧಿಕಾರಿಗಳು ಮಂಗಳವಾರ ತೆರಳಿ ಲೋಪದೋಷಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಉಳ್ಳಾಲ ತಹಶೀಲ್ದಾರ್, ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಹಿತ ಹಲವಾರು ಅಧಿಕಾರಿಗಳು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಈ ಮಧ್ಯೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಕೂಡ ಹಾಜಬ್ಬರನ್ನು ಫೋನ್ ಮೂಲಕ ಸಂಪರ್ಕಿಸಿ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಈಗಾಗಲೆ ತಾನು ಹರೇಕಳ ಹಾಜಬ್ಬರ ಜೊತೆ ಮಾತನಾಡಿರುವೆ. ಅವರ ಹೆಸರಿನಲ್ಲಿ ತಿದ್ದುಪಡಿ ಇದ್ದ ಕಾರಣ ಮತದಾರರ ಕರಡು ಪಟ್ಟಿಯಲ್ಲಿ ಹೋಲಿಕೆಯಾಗುತ್ತಿರಲಿಲ್ಲ. ಅದನ್ನು ಸರಿಪಡಿಸಲು ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಸಂಬಂಧಪಟ್ಟ ದಾಖಲೆಗಳನ್ನು ಪಡೆದು ಸರಿಪಡಿಸಲಾಗಿದೆ ಎಂದಿದ್ದಾರೆ.’ಇಂದು ಮಧ್ಯಾಹ್ನ ನಾನು ಮನೆಯಲ್ಲಿದ್ದಾಗ ಎರಡು ವಾಹನದಲ್ಲಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನನ್ನ ಹೆಸರಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಪತ್ರಗಳನ್ನು ಪಡೆದು ಸರಿಪಡಿಸುವುದಾಗಿ ತಿಳಿಸಿದ್ದಾರೆ.
ಈ ಮಧ್ಯೆ ಜಿಲ್ಲಾಧಿಕಾರಿ ಕೂಡ ಮೊಬೈಲ್ ಮೂಲಕ ಸಂಪರ್ಕಿಸಿ ಧೈರ್ಯ ತುಂಬಿದ್ದಾರೆ. ಸಮಸ್ಯೆಗೆ ಪರಿಹಾರ ಸಿಗುವ ವಿಶ್ವಾಸವಿದೆ’ ಎಂದು ಹರೇಕಳ ಹಾಜಬ್ಬ ತಿಳಿಸಿದ್ದಾರೆ.








