




ಬೆಂಗಳೂರು: ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದು, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಕ್ಸ್ ಖಾತೆಯಲ್ಲಿ ವಿಡಿಯೋ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
“ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸಲು ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ನಮ್ಮ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದೇವೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರಾವಳಿ ಭಾಗದ ಜನರ ಸಮಸ್ಯೆಗಳು ಹಾಗೂ ಅಗತ್ಯಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಸ್ಥಳದಲ್ಲೇ ನಿರ್ಧಾರಗಳನ್ನು ಕೈಗೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.
ಬಂದರು, ಮೂಲಸೌಕರ್ಯ, ಮೀನುಗಾರಿಕೆ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಡಿಕೆ ಶಿವಕುಮಾರ್ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ತಮ್ಮ ವಿಡಿಯೋ ಸಂದೇಶದ ಕೊನೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ತುಳು ಭಾಷೆಯಲ್ಲಿ “ಮಾತೆರೆಗ್ಲಾ ಸೊಲ್ಮೆಲು” (ಎಲ್ಲರಿಗೂ ವಂದನೆಗಳು) ಎಂದು ಹೇಳುವ ಮೂಲಕ ಕರಾವಳಿ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.








