Wednesday, September 16, 2026
spot_imgspot_img
spot_imgspot_img

ಪಣಂಬೂರು: ಸುಲಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

- Advertisement -
- Advertisement -

ಮಂಗಳೂರು: ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್ ತೋರಿಸಿ ಮೊಬೈಲ್ ಫೋನ್ ಕಸಿದುಕೊಂಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹25 ಸಾವಿರ ದಂಡ ವಿಧಿಸಿದೆ.2020ರ ನವೆಂಬರ್ 16ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬಿಹಾರ ಮೂಲದ ಗೋವಿಂದ್ ಕುಮಾರ್ ಅವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಣಂಬೂರಿನ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ಎನ್‌ಎಂಪಿಎ ಮುಖ್ಯ ಆಡಳಿತ ಕಚೇರಿ ಕಡೆಗೆ ತೆರಳುವ ರಸ್ತೆಯಲ್ಲಿ ಆರೋಪಿಗಳಾದ ಜಾವೀದ್ ಆಖ್ತರ್ ಅಲಿಯಾಸ್ ಅಖ್ತರ್ (28) ಮತ್ತು ತೋಯಿದ್ ಖಾದರ್ ಯಾನೆ ತೋಯಿ (24) ಸ್ಕೂಟರ್‌ನಲ್ಲಿ ಬಂದು ಅವರನ್ನು ಅಡ್ಡಗಟ್ಟಿ ತಡೆದಿದ್ದರು.

ನಂತರ ಕಬ್ಬಿಣದ ರಾಡ್ ತೋರಿಸಿ ಬೆದರಿಸಿ, ಸುಮಾರು ₹5 ಸಾವಿರ ಮೌಲ್ಯದ ಮೊಬೈಲ್ ಫೋನ್‌ನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಕುರಿತು ಗೋವಿಂದ್ ಕುಮಾರ್ ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡಿದ್ದ ಪಣಂಬೂರು ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಅವರು ನ.17ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳವು ಮಾಡಿದ ಸೊತ್ತನ್ನು ವಶಪಡಿಸಿಕೊಂಡಿದ್ದರು. ಬಳಿಕ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣವು ಎಸ್‌ಸಿ ನಂ.84/2021ರಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ದಲ್ಲಿ ವಿಚಾರಣೆಗೊಂಡಿದ್ದು, ಸೆ.16, 2026ರಂದು ನ್ಯಾಯಾಧೀಶರಾದ ಮೋಹನ್ ಜೆ.ಎಸ್. ಅವರು ಆರೋಪಿಗಳಿಗೆ ಐಪಿಸಿ ಕಲಂ 392 ಜೊತೆಗೆ 34ರ ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಭದರಿನಾಥ ನೈಯಾರಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!