



ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ಇಂದು(ಸೆ.18) ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗಳಿಗೆ ಸರ್ಕಾರದಿಂದ ಮಹತ್ವದ ಸ್ಪಂದನೆ ಸಿಗುವ ನಿರೀಕ್ಷೆಯಿದೆ.
ಇಂದಿನ ಕ್ಯಾಬಿನೆಟ್ ಸಭೆಯ ಅಜೆಂಡಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ 16 ಪ್ರಮುಖ ವಿಚಾರಗಳು ಸ್ಥಾನ ಪಡೆದುಕೊಂಡಿದ್ದು, ವಿಸ್ತೃತ ಚರ್ಚೆ ನಡೆಯಲಿದೆ. ಕರಾವಳಿ ಭಾಗದ ಆರ್ಥಿಕ, ಸಾಮಾಜಿಕ ಹಾಗೂ ಕೈಗಾರಿಕಾ ಪ್ರಗತಿಗೆ ವೇಗ ನೀಡಲು ಸರ್ಕಾರವು ಮಹತ್ವಾಕಾಂಕ್ಷೆಯ ಸಮಗ್ರ ಅಭಿವೃದ್ಧಿ ‘ಬ್ಲೂ ಪ್ರಿಂಟ್’ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಜಿಲ್ಲೆಯ ಮೂಲಸೌಕರ್ಯ, ಬಂದರು ವಿಸ್ತರಣೆ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ವಲಯಕ್ಕೆ ಸಂಬಂಧಿಸಿದ ಪ್ರಮುಖ ಪ್ರಸ್ತಾವನೆಗಳಿಗೆ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಗುವ ನಿರೀಕ್ಷೆಯಿದೆ.
ಒಂದೇ ಕ್ಯಾಬಿನೆಟ್ ಸಭೆಯ ಮೂಲಕ ನೂರಾರು ನಿರೀಕ್ಷೆಗಳನ್ನು ಹೊತ್ತಿರುವ ಜಿಲ್ಲೆಯ ನಾಗರಿಕರು, ಕರಾವಳಿಗೆ ವಿಶೇಷ ಪ್ಯಾಕೇಜ್ ಅಥವಾ ಅನುದಾನದ ಬಂಪರ್ ಕೊಡುಗೆ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಬೆಳವಣಿಗೆಗೆ ಪೂರಕವಾದ ಹಲವು ಹೊಸ ಯೋಜನೆಗಳು ಹಾಗೂ ಅನುದಾನ ಹಂಚಿಕೆಗೆ ಈ ಸಭೆಯು ವೇದಿಕೆಯಾಗಲಿದ್ದು, ಸರ್ಕಾರದ ಅಂತಿಮ ತೀರ್ಮಾನಗಳತ್ತ ಎಲ್ಲರ ಚಿತ್ತ ನೆಟ್ಟಿದೆ. ಸಂಪುಟ ಸಭೆಯ ಮುಂದೆ ಪ್ರವಾಸೋದ್ಯಮ, ಬಂದರು, ಸೇತುವೆ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ಪ್ರಸ್ತಾವನೆಗಳು ಅಂತಿಮ ತೀರ್ಮಾನಕ್ಕೆ ಸಜ್ಜಾಗಿವೆ.
ಕರಾವಳಿ ಭಾಗದ ಸರ್ವಾಂಗೀಣ ಪ್ರಗತಿಗೆ ಬೃಹತ್ ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಜನರ ಬಹುದಿನಗಳ ಕನಸಾದ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ಕಲ್ಪಿಸುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಪುಟದಲ್ಲಿ ಚಾಲನೆ ದೊರೆಯುವ ನಿರೀಕ್ಷೆಯಿದೆ.
ಕರಾವಳಿ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿಶೇಷ ಅನುದಾನ ಹಂಚಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.








