ಬೆಂಗಳೂರು: ಹತ್ತನೇ ತರಗತಿಯ ಪರೀಕ್ಷಗೆ ಪೂರಕವಾಗುವಂತೆ ಬೋಧನೆ, ಕಲಿಕೆಯ ಮೌಲ್ಯಮಾಪನಕ್ಕೆ ಗುರುತಿಸಲಾದ ಪಠ್ಯವನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಚಾಮರಾಜನಗರ ಜಿಲ್ಲೆಯ ವಿವಿಧ ಹಿರಿಯ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ತರಗತಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಕಲಿಕೆಯ ಹಿತದೃಷ್ಟಿಯಿಂದ ಹಾಗೂ ಅವರ ಕಲಿಕೆಗೆ ಖಚಿತತೆಯನ್ನು ಒದಗಿಸುವ ಸಲುವಾಗಿ, ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಗುರುತಿಸಲಾಗುವ ಅಂಶಗಳನ್ನು ಒದಗಿಸಲಾಗುವುದು ಎಂದರು.
ಪ್ರತಿ ವರ್ಷ ಲಭ್ಯವಾಗುತ್ತಿದ್ದ ಶಾಲಾ ಕೆಲಸದ ದಿನಗಳಿಗೆ ಅನುಗುಣವಾಗಿ ಸಿದ್ಧಪಡಿಸಿದ್ದ ಪಠ್ಯಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ. ಪಠ್ಯಪುಸ್ತಕಗಳಲ್ಲಿರುವ ಪೂರ್ಣ ವಿಷಯಗಳನ್ನು ಈ ಸಾಲಿನಲ್ಲಿ ಬೋಧಿಸುವುದು ಕಷ್ಟಸಾಧ್ಯವಾದ್ದರಿಂದ 2020-21 ಶೈಕ್ಷಣಿಕ ಸಾಲಿಗೆ ಲಭ್ಯವಾಗಬಹುದಾದ ದಿನಗಳಿಗೆ ಅನುಸಾರವಾಗಿ ಕೆಲವು ಪಠ್ಯಾಂಶಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸದಿರಲು ಇಲಾಖೆ ನಿರ್ಧರಿಸಿದೆ. ಸೂಚಿಸಿರುವ ವಿಷಯಾಂಶಗಳ ಅನುಸಾರ ಯಾವ ಘಟಕಗಳ ಬೋಧನಾ-ಕಲಿಕೆಗೆ, ಯಾವ ಸ್ವರೂಪದ ಕಲಿಕಾ ಪ್ರಕ್ರಿಯೆ ಹೊಂದಿಕೊಳ್ಳುತ್ತದೆ ಎಂದು ತೀರ್ಮಾನಿಸಿ ಅದರಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.