ಉಡುಪಿ: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳು ಸೂಚನೆಯನ್ನು ನೀಡಿದ್ದು, ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸುವುದರ ಜೊತೆಗೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆಯನ್ನು ನೀಡಿದ್ದಾರೆ.
ಉಡುಪಿಯಲ್ಲಿಂದು ಕೋವಿಡ್ ಎರಡನೇ ಲಸಿಕೆಯನ್ನು ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಮಾಡುವುದು, ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.
ಅಲ್ಲದೇ ಸಭೆ ಸಮಾರಂಭಗಳಿಗೆ ಸಂಬಂಧಿಸಿದಂತೆ ಹಳೆಯ ಆದೇಶವನ್ನು ರದ್ದುಗೊಳಿಸಿ, ಹೊಸ ಆದೇಶವನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಅಂಗಡಿ, ಮಾಲ್ ಗಳಲ್ಲಿನ ಮಾಲೀಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸದೇ ಇದ್ದಲ್ಲಿ ದಂಡ ವಿಧಿಸುವುದರ ಜೊತೆಗೆ ಅಂಗಡಿ ಲೈಸೆನ್ಸ್ ರದ್ದು ಮಾಡಲಾಗುತ್ತದೆ.
ಮದುವೆ ಸಮಾರಂಭದಲ್ಲಿ ಐದುನೂರು ಜನ, ಬರ್ತ್ ಡೇ ಮೊದಲಾದ ಪಾರ್ಟಿಗಳಿಗೆ ನೂರು ಜನರು ಸೇರಲು ಅವಕಾಶವಿದೆ ಎಂದಿದ್ದಾರೆ.ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸದೇ ಇದ್ದರೆ ಅಪಾಯ ಎದುರಾಗುವುದು ಖಂಡಿತಾ.
ಅಲ್ಲದೇ ಎರಡೂ ರಾಜ್ಯಗಳ ಜೊತೆಗೆ ಉಡುಪಿ ನಿಕಟ ಸಂಬಂಧವನ್ನು ಹೊಂದಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ನೆಗೆಟಿವ್ ವರದಿ ಇಲ್ಲದೇ ಊರಿಗೆ ಬಂದರೆ ಅಂತವರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕೆಂದು ಅವರು ತಿಳಿಸಿದ್ದಾರೆ.