ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಇಂದು ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊದಲು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ನಂತರ ಮಣಿಪಾಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಮಧ್ಯಾಹ್ನ ಮೂರು ಗಂಟೆ ಹೊತ್ತಿಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ತಿಳಿದುಬಂದಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸಿಎಂ ತುರ್ತು ಸಭೆ ನಡೆಸಿದ್ದರು. ಸಭೆ ನಡೆದ ಕೆಲವೇ ಗಂಟೆಗಳ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ಬೆಳಗಾವಿ ಪ್ರವಾಸದಲ್ಲಿದ್ದ ಯಡಿಯೂರಪ್ಪ ಅವರಲ್ಲಿ ಮಧ್ಯಾಹ್ನದ ಹೊತ್ತಿಗೆ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿ, ವಿಶ್ರಾಂತಿ ಪಡೆದುಕೊಳ್ಳಲು ಸಲಹೆ ನೀಡಿದ್ದರು.
ಅವರಿಗೆ ಈಚೆಗಷ್ಟೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ನೆಗೆಟಿವ್ ಫಲಿತಾಂಶ ಬಂದಿತ್ತು. ಇದೀಗ ಎರಡನೇ ಬಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.