ತಿರುವನಂತಪುರಂ: ಮೇ 17ರಂದು ಅರಬ್ಬಿ ಸಮುದ್ರದಲ್ಲಿನ ತೀವ್ರ ವಾಯುಭಾರ ಕುಸಿತದ ಪರಿಣಾಮವಾಗಿ ತೀವ್ರ ಸ್ವರೂಪದಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಇದು ಗುಜರಾತ್ ಕರಾವಳಿ ಪ್ರದೇಶವನ್ನು ಹಾದುಹೋಗಲಿದೆ ಎಂದು ವರದಿಯಾಗಿದೆ.
ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ತೌಕ್ತೆ ಚಂಡಮಾರುತದಿಂದಾಗಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಹಲವೆಡೆ ಕರಾವಳಿ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.
ತೌಕ್ತೆ ಚಂಡಮಾರುತದ ರೌದ್ರಾವತಾರದಿಂದ ಕೇರಳದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕರಾವಳಿ ಭಾಗದ ಪ್ರದೇಶಗಳಲ್ಲಿ ತೀವ್ರ ಕಡಲ್ಕೊರೆತದಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡಿನಲ್ಲಿ ಸಮುದ್ರ ಪ್ರದೇಶದ ಸಮೀಪವಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿರುವುದಾಗಿ ವರದಿ ತಿಳಿಸಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಪ್ರದೇಶದಲ್ಲಿ ವಾಸವಾಗಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ತೀವ್ರ ವಾಯುಭಾರ ಕುಸಿತದಿಂದ ಹವಾಮಾನ ವೈಪರೀತ್ಯವಾಗಲಿದ್ದು, ಇದರಿಂದಾಗಿ ಶನಿವಾರ ಬೆಳಗ್ಗಿನಿಂದಲೇ ತೌಕ್ತೆ ಚಂಡಮಾರುತ ಆರಂಭವಾಗಲಿದ್ದು, ಶನಿವಾರ ರಾತ್ರಿಯ ಬಳಿಕ ತೀವ್ರವಾಗಿ ಅಪ್ಪಳಿಸಲಿದೆ ಎಂದು ವರದಿಯಲ್ಲಿ ತಿಳಿಸಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ, ತೌಕ್ತೆ ಚಂಡಮಾರುತ ಅರಬ್ಬಿ ಸಮುದ್ರದ ಈಶಾನ್ಯ ಪ್ರದೇಶ, ಲಕ್ಷದ್ಚೀಪ, ಮಾಲ್ಡೀವ್ಸ್ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ತೀವ್ರ ಸ್ವರೂಪದ ಗಾಳಿ, ಮಳೆಯಾಗಲಿದೆ ಎಂದು ತಿಳಿಸಿದೆ.