ಬೆಂಗಳೂರು: ದೆಹಲಿ ವರಿಷ್ಟರು ಬಯಸುವವರೆಗೂ ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಬೇಡ ಎಂದರೆ ರಾಜೀನಾಮೆ ನೀಡಲು ಸಿದ್ದ ಎಂದು ಸಿ.ಎಂ.ಯಡಿಯೂರಪ್ಪ ಅವರು ಇಂದು ಹೊಸ ಬಾಂಬ್ ಸಿಡಿಸಿದರು.


ಒಂದು ಕಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಶಾಸಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲೇ ಯಡಿಯೂರಪ್ಪನವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ.


ಹಿ0ದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ಷ ಮಾಜಿ ಮುಖ್ಯಮಂತ್ರಿಯವರಾದ ದಿವಂಗತ ಡಿ. ದೇವರಾಜ ಅರಸುರವರ 39ನೇ ಪುಣ್ಯ ಸ್ಮರಣೆ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ನಂತರ ಅವರು ಮಾಧ್ಯಮದವರ ಜೊತೆ ಮಾತನಾಡಿದರು.


ಎಲ್ಲಿಯವರೆಗೂ ಹೈಕಮಾಂಡ್ ನಾಯಕರು ನನ್ನನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಲು ಇಚ್ಛೆಸುತ್ತಾರೋ ಅಲ್ಲಿಯವರೆಗೆ ನಾನು ಮುಂದುವರೆಯುತ್ತೇನೆ ಎಂದು ಹೇಳಿದರು. ಒಂದು ವೇಳೆ ಅವರು ( ದೆಹಲಿ ನಾಯಕರು) ನೀವು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಸೂಚಿಸಿದರೆ, ನಾನು ಮಾರುಮಾತನಾಡದೆ ನನ್ನ ಸ್ಥಾನಕ್ಕೆ ಸಂತೋಷದಿ0ದಲೇ ರಾಜೀನಾಮೆ ನೀಡುತ್ತೇನೆ ಎಂದರು.

ನನಗೆ ವರಿಷ್ಟರು ಒಂದು ಅವಕಾಶ ಕೊಟ್ಟಿದ್ದಾರೆ. ಅದನ್ನು ಸದುಪಯೋಗಪಡಿಸಿಕೊಂಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನ ಬಗ್ಗೆ ಯಾರೇ ಎಷ್ಟೇ ಟೀಕೆ ಟಿಪ್ಪಣಿ ಮಾಡಿದರೂ ಅದರ ಬಗ್ಗೆ ಗಮನ ಕೊಡುವುದಿಲ್ಲ ಎಂದು ತಮ್ಮ ವಿರೋಧಿಗಳಿಗೆ ಮಾತಿನಲ್ಲೇ ಟಾಂಗ್ ಕೊಟ್ಟರು.

ಈ ಯಡಿಯೂರಪ್ಪನವರ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟಿದೆ.ಎಷ್ಟು ದಿನ ವಿಶ್ವಾಸ ಇಟ್ಟು ಮುಂದುವರೆಯಿರಿ ಎನ್ನುತ್ತಾರೋ ಅಲ್ಲಿಯವರೆಗೂ ಇರುತ್ತೇನೆ.ಯಾವಾಗ ರಾಜೀನಾಮೆ ಕೊಡಿ ಅಂತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ತಿಳಿಸಿದರು.


ನಾನು ಯಾರ ಬಗ್ಗೆಯೂ ಟೀಕೆ ಮಾಡಲ್ಲ. ಪಕ್ಷ ನನಗೆ ಎಲ್ಲ ಅವಕಾಶ ನೀಡಿದೆ. ಹೈಕಮಾಂಡ್ ಸೂಚಿಸಿದರೆ ಕೂಡಲೇ ರಾಜೀನಾಮೆ ನೀಡುತ್ತೇನೆ. ಪಕ್ಷ ಕೊಟ್ಟಿರುವ ಅವಕಾಶವನ್ನು ಉಪಯೋಗಿಸಿಕೊಂಡು ಕೆಲಸ ಮಾಡಿದ್ದೇನೆ ಎಂದರು.