ಉಡುಪಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2018ರಲ್ಲಿ ಅಂದಿನ ಜಿಲ್ಲಾಧಿಕಾರಿ ಕೊಡವೂರು ಗ್ರಾಮದ ಸರ್ವೇ ನಂ 53/6 ರಲ್ಲಿ 67 ಸೆಂಟ್ಸ್ ಜಾಗವನ್ನು ವಕ್ಫ್ ಬೋರ್ಡ್ ಮುಖೇನ ಕಲ್ಮತ್ ಮಸೀದಿ ಹೆಸರಿಗೆ ಮಂಜೂರು ಮಾಡಿದ್ದು, ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಜಾಗವನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವಂತೆ ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಕಂದಾಯ ಇಲಾಖೆ ಜೂನ್ 22ರಂದು ಸರ್ಕಾರದ ಹೆಸರಿಗೆ ಅಧಿಸೂಚನೆ ಹೊರಡಿಸಿದೆ.

ಸರ್ಕಾರಿ ಜಾಗವನ್ನು ಮಸೀದಿಗೆ ಮಂಜೂರು ಮಾಡಿದ ಬಗ್ಗೆ ವಿವಾದ ಉಂಟಾಗಿದ್ದು, ಶಾಸಕ ಕೆ. ರಘುಪತಿ ಭಟ್ ನೇತೃತ್ವದ ನಿಯೋಗ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಭೇಟಿಯಾಗಿ ಸ್ಥಳೀಯ ಸ್ಥಿತಿಗತಿ ಮನವರಿಕೆ ಮಾಡಿ ಈ ಜಾಗವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದೆ. ಅದನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವಂತೆ ಮನವಿ ಮಾಡಿದ್ದರು.

ಕಂದಾಯ ಸಚಿವರ ಸೂಚನೆ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಥಳೀಯ ಸ್ಥಿತಿಗತಿ ವರದಿ ಸಲ್ಲಿಸಿದ್ದು, ಈ ಜಾಗವನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಸರ್ಕಾರಿ ಜಾಗವನ್ನು ಮರಳಿ ವಶಕ್ಕೆ ಪಡೆಯುವಂತೆ ಸಲ್ಲಿಸಿದ ಮನವಿಗೆ ತಕ್ಷಣ ಸ್ಪಂದಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ದಿಟ್ಟ ನಿರ್ಧಾರ ಕೈಗೊಂಡ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಶಾಸಕ ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.










