Tuesday, September 1, 2026
spot_imgspot_img
spot_imgspot_img

ಇನ್ನೂ 2 ದಿನಗಳ ಕಾಲ ಕರ್ನಾಟಕದಲ್ಲಿ ವರುಣನ ಅಬ್ಬರ; ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹದಿನೈದು ದಿನಗಳಿಂದ ಠಿಕಾಣಿ ಹೂಡಿರುವ ಮಳೆರಾಯ ವಿರಾಮವನ್ನೇ ಪಡೆಯದೆ ನಿರಂತರವಾಗಿ ಸುರಿಯುತ್ತಿದ್ದು, ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರವನ್ನು ನೋಡಿ ಜನ ಚಿಂತಾಕ್ರಾಂತರಾಗಿದ್ದಾರೆ.

ಆಗುಂಬೆ ಸುತ್ತಮುತ್ತಲೂ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಅಡಿಕೆ ಬೆಳೆಗಾರರಿಗೆ ಈ ಬಾರಿಯೂ ಫಸಲಿನ ಬಗ್ಗೆ ಆತಂಕ ಆರಂಭವಾಗಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು, ಜುಲೈ 23ರ ತನಕವೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಬಿಡುವು ನೀಡದೇ ಸುರಿಯುತ್ತಿರುವ ಮಳೆಯಿಂದಾಗಿ ಆ ಪ್ರದೇಶಕ್ಕನುಗುಣವಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ವಾತಾವರಣವಿದ್ದು ನಿತ್ಯವೂ ಸುರಿವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿರುವುದರಿಂದಾಗಿ ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೀಗಾಗಿ ಜುಲೈ 23 ಅಥವಾ 24ರ ತನಕವೂ ಮಳೆಯ ವಾತಾವರಣ ಮುಂದುವರೆಯಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಸದ್ಯಕ್ಕೆ ನಿಲ್ಲುವುದು ಅನುಮಾನ ಎನ್ನಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಜುಲೈ 21, 22 ಮತ್ತು 23ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸದರಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ.

ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಅಧಿಕ ಪ್ರಮಾಣದ ಮಳೆಯಾಗಲಿದೆ. ಇಂದು ಮತ್ತು ನಾಳೆ (ಜುಲೈ 21 ಮತ್ತು 22) ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಜುಲೈ 23ರಂದು ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ನಿನ್ನೆ ಮಧ್ಯಾಹ್ನ ಕೆಲ ಭಾಗಗಳಲ್ಲಿ ಮಳೆಯ ಅಬ್ಬರ ಕೊಂಚ ಹೆಚ್ಚಾಗಿದೆ.

ಸದ್ಯದ ಮಾಹಿತಿ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ವಾಹನ ಸವಾರರು, ಸಾರ್ವಜನಿಕರು ರಸ್ತೆಗಿಳಿಯುವ ಮುನ್ನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಜುಲೈ 23 ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಅಂದಾಜಿಸಲಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಸುರಿಯುವ ಸಂಭವವಿದೆ.

- Advertisement -

Related news

error: Content is protected !!