ಚಿಕ್ಕಬಳ್ಳಾಪುರ: ತಾಲ್ಲೂಕಿನ ಆರೂರು ಬಳಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜಿನ ಕೊನೆಯ ಹಂತದ ಕಟ್ಟಡ ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ ಕಾರ್ಮಿಕರು ಕೆಲಸ ಮಾಡುವಾಗ ಈ ಅವಘಡ ಸಂಭವಿಸಿದೆ. ಸ್ಟೀಲ್ ಪ್ರೇಂ ಅಳವಡಿಸಿ ಸಿಮೆಂಟ್ ಹಾಕುವ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮತ್ತು ಎಸ್ಪಿ ಡಿ.ಎಲ್.ನಾಗೇಶ್ ಆಸ್ಪತ್ರೆ ಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಎಂಜಿನಿಯರ್ಗಳಿಗೆ ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ತಾಂತ್ರಿಕವಾಗಿ ಏನೇ ಲೋಪದೋಷಗಳು ಇದ್ದರೆ ಸರಿಪಡಿಸಲಾಗುವುದು. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಮಗಾರಿ ತ್ವರಿತವಾಗಿ ನಡೆಸಬೇಕು ಎಂದು ಕಾರ್ಮಿಕರು ರಾತ್ರಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ. ನಾಲ್ಕು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಉಳಿದವರಿಗೆ ಸಣ್ಣ ಮಟ್ಟದ ಶಸ್ತ್ರ ಚಿಕಿತ್ಸೆ ಅಗತ್ಯವಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ರಾಜಾರೆಡ್ಡಿ ತಿಳಿಸಿದ್ದಾರೆ.