ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.ಸಂಸತ್ ಭವನದಲ್ಲಿ 15 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ರಾಜ್ಯದ ಪರವಾಗಿ ಅನೇಕ ಮನವಿಗಳನ್ನು ಪ್ರಧಾನಿಗಳ ಮುಂದಿಟ್ಟಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಅನುದಾನವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಪ್ರಧಾನಿ ಬಳಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯ ಪ್ರವಾಹ ನಿರ್ವಹಣಾ ನಿಧಿ ಅಥವಾ ರಾಷ್ಟ್ರೀಯ ನಿರ್ವಹಣಾ ನಿಧಿಯಲ್ಲಿನ ನಿಯಮಗಳನ್ನು ಪರಿಷ್ಕರಿಸಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಕೋರಿದ್ದಾರೆ.ವಿಪತ್ತಿನಿಂದ ತೊಂದರೆಗೀಡಾದ ಜನರಿಗೆ ಸಕಾಲಕ್ಕೆ ಸರಿಯಾಗಿ ಸಮರ್ಪಕ ರೀತಿಯಲ್ಲಿ ತ್ವರಿತವಾಗಿ ಆರ್ಥಿಕ ನೆರವನ್ನು ನೀಡಲು ಇದು ಸಹಕಾರಿಯಾಗಲಿದೆ ಎಂದು ಮನವಿ ಮಾಡಿದರು.
ಕೃಷ್ಣಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸುವಂತೆ , ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಮೇಕೆದಾಟು, ಕಳಸಾ-ಬಂಡೂರಿ ನಾಲಾ ಯೋಜನೆ ಸೇರಿದಂತೆ ರಾಜ್ಯದ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಶೀಘ್ರವಾಗಿ ಅನುಮೋದನೆ ಹಾಗೂ ಅನುಮತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.ನವೆಂಬರ್ 19ರಂದು ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆಯನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಿಎಸ್ವೈ ಆಹ್ವಾನ ನೀಡಿದರು.