





ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಮಣಿಪಾಲ್ ಕೌಂಟಿ ರಸ್ತೆಯಲ್ಲಿ ನಡೆದಿದೆ.
ಬಸಾಪುರ ನಿವಾಸಿ ನಾರಾಯಣಪ್ಪ(56) ಮೃತರು. ನಾರಾಯಣಪ್ಪ ಮುಂಜಾನೆ 5 ಗಂಟೆಗೆ ಮನೆಯಿಂದ ತೆರಳಿದ್ದರು. ಬಳಿಕ ಸ್ವಿಫ್ಟ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಕಾರಿನಲ್ಲಿದ್ದ ಮೃತದೇಹವನ್ನು ನೋಡಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ.
ಮುಖ ಮತ್ತು ಎದೆಯ ಭಾಗಕ್ಕೆ ಗಾಯಗಳಾಗಿರುವ ಸ್ಥಿತಿಯಲ್ಲಿ ನಾರಾಯಣಪ್ಪ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಬೆಂಗಳೂರು ಪೊಲೀಸರು ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕೊಲೆ ಮಾಡಿ ಕಾರಿನಲ್ಲಿಟ್ಟು ರಸ್ತೆಯಲ್ಲಿ ಬಿಟ್ಟುಹೋಗಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದು, ಹಣ ಕಾಸಿನ ವ್ಯವಹಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.








