ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ತುಮಕೂರು ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಪುತ್ರ ಮೋಹನ್ ಕುಮಾರ್ ಸಿ.ಎಸ್ (16) ಎಂದು ಗುರುತಿಸಲಾಗಿದೆ.
ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯಿರುವ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ 10 ತರಗತಿ ಓದುತ್ತಿದ್ದ. ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದೆ. ಅದರಂತೆ ನಿನ್ನೆ ಬೆಳಗ್ಗೆ ತುರುವೇಕೆರೆ ಪಟ್ಟಣದ ಸರಸ್ವತಿ ಬಾಲಕರ ಪ್ರೌಢಶಾಲಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದ. ಪರೀಕ್ಷೆ ಬರೆಯುತ್ತಿದ್ದಾಗ ಮೋಹನ್ ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ತುರುವೆಕೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ತೀವ್ರ ಅಸ್ಪಸ್ಥಗೊಂಡ ಹಿನ್ನೆಲೆ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯವಂತೆ ವೈದ್ಯರು ಸೂಚನೆ ನೀಡಿದ್ದರು. ಅಂಬ್ಯುಲೆನ್ಸ್ನಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಗುಬ್ಬಿ ಸಮೀಪ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.