



ಬಂಟ್ವಾಳ: ಅಪರಿಚಿತ ವಾಹನ ಡಿಕ್ಕಿಯಾಗಿ ಆಕ್ಟಿವಾ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಕಡೆಗೋಳಿ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಬಜಪೆ ಕೈಕಂಬ ನಿವಾಸಿ ಅಭಿಜಿತ್ (28) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರ ಸಂದೀಪ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಜಿತ್ ಅವರು ಸ್ನೇಹಿತ ಸಂದೀಪ್ ಅವರನ್ನು ಆಕ್ಟಿವಾದಲ್ಲಿ ಬಂಟ್ವಾಳ ಅಮ್ಟಾಡಿ ಮನೆಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ, ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಫರಂಗಿಪೇಟೆ ಸಮೀಪದ ಕಡೆಗೋಳಿ ಎಂಬಲ್ಲಿ ಅಪರಿಚಿತ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಡಿಕ್ಕಿಯ ರಭಸಕ್ಕೆ ಆಕ್ಟಿವಾ ಪಲ್ಟಿಯಾಗಿದ್ದು, ಅಭಿಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಹಿಂಬದಿ ಸವಾರ ಸಂದೀಪ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಐ. ಆದರ್ಶ್ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.








