
ಮುಂಡಾಜೆ ಗ್ರಾಮದಲ್ಲಿ ಡಿ.20ರಂದು ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ಬಲಭಾಗಕ್ಕೆ ಚಲಿಸಿದೆ. ಈ ವೇಳೆ ವಿರುದ್ಧ ದಿಕ್ಕಿನಿಂದ ಧರ್ಮಸ್ಥಳದಿಂದ ಕುಕನೂರಿನತ್ತ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಎಡಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಕಾರು ಸುಮಾರು 50 ಮೀಟರ್ ದೂರಕ್ಕೆ ಎಸೆದು ರಸ್ತೆ ಪಕ್ಕದ ಧರೆಗೆ ಗುದ್ದಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.



ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ನಲ್ಲಿದ್ದ ಪ್ರಯಾಣಿಕರನ್ನು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಬಸ್ಗಳ ಮೂಲಕ ಗಮ್ಯಸ್ಥಾನಕ್ಕೆ ಕಳುಹಿಸಿಕೊಡಲಾಯಿತು.








