ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.
‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.
ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಬೇಕು. ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು. ಅವರ ದೂರುಗಳ ಬಗ್ಗೆ ತಾತ್ಸಾರ ಮಾಡಿದರೆ ಸಹಿಸುವುದಿಲ್ಲ. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದು, ಅವಾಚ್ಯ ಮಾತುಗಳನ್ನು ಹಾಗೂ ತಿರುಚಿದ ವೀಡಿಯೋಗಳನ್ನು ಪ್ರಕಟಿಸುವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.