500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿರುವ ಆರೋಪದಡಿ ಕೆ.ಆರ್.ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ಲೋಕಾಯುಕ್ತ ಪೊಲೀಸ್ ವಿಭಾಗದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಡಿವೈಎಸ್ಪಿ ಪ್ರಮೋದ್ ಕುಮಾರ್ ಎಸ್ಐಟಿಯ ನೇತೃತ್ವ ವಹಿಸಿದ್ದು, ಅವರೂ ಸೇರಿದಂತೆ ಇಬ್ಬರು ಡಿವೈಎಸ್ಪಿ, ನಾಲ್ವರು ಇನ್ಸ್ಪೆಕ್ಟರ್ಗಳು ತಂಡದಲ್ಲಿದ್ದಾರೆ. ಒಬ್ಬ ವ್ಯಕ್ತಿಯ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಲೋಕಾಯುಕ್ತದಲ್ಲಿ ಇದೇ ಮೊದಲ ಬಾರಿಗೆ ಎಸ್ಐಟಿ ರಚಿಸಲಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಅಜಿತ್ ರೈ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಆದರೆ, ಈಗ ಪ್ರಕರಣವು ಒಂದು ಹಗರಣದ ಸ್ವರೂಪಕ್ಕೆ ತಲುಪಿದೆ. ಬಹು ಆಯಾಮದಲ್ಲಿ ತನಿಖೆ ನಡೆಸುವುದು ಅಗತ್ಯವಿದೆ. ಈ ಕಾರಣದಿಂದ ಎಸ್ಐಟಿ ರಚಿಸಲಾಗಿದೆ. ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆ ನಡೆಸಲಿದೆ’ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.