


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಕೊನೆಗೂ ರಾಷ್ಟ್ರೀಯ ತನಿಖಾ ಸಂಸ್ಥೆಯ(NIA) ಬಲೆಗೆ ಬಿದ್ದಿದ್ದಾನೆ. ಕತಾರ್ನ ಕೊಲ್ಲಿ ರಾಷ್ಟ್ರದಿಂದ ಕೇರಳದ ಕಣ್ಣೂರಿಗೆ ಬಂದ ತಕ್ಷಣವೇ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಸಾಮಾಜಿಕ ಶಾಂತಿಕೆ ಧಕ್ಕೆ ನೀಡುವ ಗಂಭೀರ ಕೃತ್ಯವೆಂದು ಪರಿಗಣಿಸಿ ಎನ್ಐಎ ತನಿಖೆ ಕೈಗೊಂಡಿತ್ತು. ಅಂದಿನಿಂದಲೇ ತಲೆಮರೆಸಿಕೊಂಡಿದ್ದ ಅಬ್ದುಲ್ ರಹಿಮಾನ್ ವಿರುದ್ಧ ಇತ್ತೀಚೆಗಷ್ಟೇ NIA ಏಪ್ರಿಲ್ನಲ್ಲಿ ನಾಲ್ವರು ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿತ್ತು.
ಈಗಾಗಲೇ ಈ ಪ್ರಕರಣದಲ್ಲಿ ಒಟ್ಟು 28 ಮಂದಿ ವಿರುದ್ಧ ಆರೋಪಪತ್ರ ಸಲ್ಲಿಸಲಾಗಿದ್ದು, ಆರೋಪಿಗಳಲ್ಲಿ 6 ಮಂದಿ ಪರಾರಿಯಾಗಿದ್ದರು. ಅಬ್ದುಲ್ ರಹಿಮಾನ್ ಸೇರಿದಂತೆ ಈ ಆರು ಮಂದಿ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲಾಗಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಪ್ರಮುಖರ ಸೂಚನೆಯ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಈ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಕೊಲೆ ಸಮಾಜದಲ್ಲಿ ಭಯ ಸೃಷ್ಟಿಸುವ ಉದ್ದೇಶದಿಂದ ನಡೆಸಲಾಯಿತು ಎಂದು ಎನ್ಐಎ ತಿಳಿಸಿದೆ.