



ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್” ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ಮಾನ್ಯ ನ್ಯಾಯಾಲಯದ ಪ್ರಕರಣ ದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು ಮಹಾ ನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭಅವರ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಅನೂರ್ಜಿತಗೊಂಡಿರುವುದು ತಿಳಿದು ಬಂದಿರುತ್ತದೆ.ಆದರೆ ಬಾಲಕೃಷ್ಣ ಸುವರ್ಣ ರವರಲ್ಲಿ ಊರ್ಜಿತವಾಗಿರುವ ಉದ್ದಿಮೆ ಪರವಾನಗಿ ಹಾಗೂ ಆಸ್ತಿ ತೆರಿಗೆ ಇದ್ದು, ಇದನ್ನು ಪರಿಶೀಲಿಸಿದಾಗ ಬಾಲಕೃಷ್ಣ ಸುವರ್ಣ ರವರಿಂದ ಪೃಥ್ವಿರಾಜ್ ಶೆಟ್ಟಿ @ ಮುನ್ನಾ ಎಂಬಾತನು 27,990/- ರೂ ಹಣವನ್ನು ಪಡೆದುಕೊಂಡು ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳನ್ನು ನಕಲಿಯಾಗಿ ಸೃಷ್ಠಿಸಿ ನೀಡಿರುವುದು ತಿಳಿದು ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಶ್ರೀ ಬಾಲಕೃಷ್ಣ ಸುವರ್ಣರವರು ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ ಆಸ್ತಿ ತೆರಿಗೆಯನ್ನು ಸೃಷ್ಠಿಸಿ ವಂಚಿಸಿರುವ ಪೃಥ್ವಿರಾಜ್ ಶೆಟ್ಟಿ ವಿರುದ್ದ ದೂರು ನೀಡಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.ಅಲ್ಲದೇ ಪಂಪ್ ವೆಲ್ ನಲ್ಲಿರುವ ಲಕ್ಷ್ಮಿ ಹಾರ್ಡ್ ವೇರ್ ವರ್ಕ್ ಶಾಪ್ ನ ಮಾಲೀಕರಾದ ದೇವಾಂಗ ಕೆ ಪಟೇಲ್ ರವರು ಕೂಡಾ ಪೃಥ್ವಿರಾಜ್ ಶೆಟ್ಟಿ @ ಮುನ್ನ ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ ನಕಲಿ ಆಸ್ತಿ ತೆರಿಗೆಯನ್ನು ಸೃಷ್ಠಿಸಿ ವಂಚಿಸಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿ ಕೇಸು ದಾಖಲಾಗಿರುತ್ತದೆ.
ಪ್ರಕರಣ ದಾಖಲಾದ ಸಮಯ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ, ಪ್ರಾಯ 25 ವರ್ಷ, ತಂದೆ: ಗಣೇಶ್ ಶೆಟ್ಟಿ, ವಾಸ: # 10-181, ಬೈಕ್ ಕ್ಲಿನಿಕ್ ಹತ್ತಿರ, ಉಜೋಡಿ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಈತನು ತಲೆಮರೆಸಿಕೊಂಡಿದ್ದು, ಕೇರಳದ ಹಲವು ಕಡೆಗಳಲ್ಲಿ ತಲೆಮರೆಸಿಕೊಂಡು ನಂತರ ಕಿನ್ನಿಗೋಳಿಗೆ ಬರುತ್ತಿರುವ ಮಾಹಿತಿಯಂತೆ ದಿನಾಂಕ:25-07-2025 ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುತ್ತಾರೆ.








