
ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಎಂಬಲ್ಲಿ ಅಕ್ರಮವಾಗಿ ಸುಡುಮದ್ದುಗಳನ್ನು ತಯಾರಿಸಿ ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಬಂಟ್ವಾಳ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್ ಸುವರ್ಣ (50) ಅವರು ನೀಡಿದ ದೂರಿನಂತೆ, ಅವರು ವಿಟ್ಲ ಮುಡ್ನೂರು ಗ್ರಾಮದ ಪ್ರಭಾರ ಗ್ರಾಮ ಆಡಳಿತಾಧಿಕಾರಿಯಾಗಿದ್ದು, ಮಾರ್ಚ್ 6ರಂದು ಸಂಜೆ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಸುಡುಮದ್ದು ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಳಿಕ ಅವರು ಕಂದಾಯ ನಿರೀಕ್ಷಕ ರವಿ ಅವರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.ಪರಿಶೀಲನೆ ವೇಳೆ ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ (51) ಎಂಬಾತನು ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೆ ಸುಡುಮದ್ದುಗಳನ್ನು ತಯಾರಿಸಿ ದಾಸ್ತಾನು ಮಾಡಿದ್ದಾಗಿ ಪತ್ತೆಯಾಗಿದೆ.
ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯದಿಂದ ಸಂಗ್ರಹಿಸಿದ್ದ ಸುಡುಮದ್ದುಗಳು ಸ್ಫೋಟಗೊಂಡಿದ್ದು, ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.58/2026ರಲ್ಲಿ ಎಕ್ಸ್ಪ್ಲೋಸಿವ್ಸ್ ಆಕ್ಟ್ 1884ರ ಕಲಂ 9B, ಎಕ್ಸ್ಪ್ಲೋಸಿವ್ ಸಬ್ಸ್ಟಾನ್ಸಸ್ ಆಕ್ಟ್ ಕಲಂ 5 ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 288ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣದ ಆರೋಪಿತ ಅಬ್ದುಲ್ ಗಫೂರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾರ್ಚ್ 7ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.









