


ಪುತ್ತೂರು: ಕೇಪುವಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕೋಳಿ ಅಂಕ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ಆದೇಶ ನೀಡಿದೆ.
ಡಿ. 20 ರಂದು ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಠಾಣಾ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಜನರು ಕೋಳಿ ಅಂಕಕ್ಕೆ ಬಳಸುವ ಕೋಳಿಗಳನ್ನು ಹಿಡಿದುಕೊಂಡು ಗುಂಪು ಸೇರಿರುವುದು ಕಂಡುಬಂದಿತ್ತು. ಅಲ್ಲಿ ಸೇರಿದ್ದ ಜನರಿಗೆ ಕಾನೂನುಬಾಹಿರ ಕೋಳಿ ಅಂಕದ ಬಗ್ಗೆ ಸೂಕ್ತ ಕಾನೂನು ಮಾಹಿತಿ ನೀಡಲಾಗಿತ್ತು. ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು, ಸ್ಥಳದಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ನೀಡಿದ್ದು, ಸ್ಥಳದಲ್ಲಿ ಸೇರಿದ್ದ ಜನರು ಕಾನೂನು ಬಾಹಿರವಾಗಿ ಕೋಳಿ ಅಂಕ ಆಟವನ್ನು ಪ್ರಾರಂಭಿಸಿರುತ್ತಾರೆ. ಈ ವೇಳೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕಾನೂನು ಬಾಹಿರವಾಗಿ ಕೋಳಿ ಅಂಕ ಆಟ ಆಡುತ್ತಿದ್ದ 16 ಜನರನ್ನು ವಶಕ್ಕೆ ಪಡೆದಿರುತ್ತಾರೆ
ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ಮತ್ತು ದುಷ್ಪರಣೆಯನ್ನು ನೀಡಿದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈಯವರ ವಿರುದ್ಧ ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 16 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶಾಸಕ ಅಶೋಕ್ ಕುಮಾರ್ ರೈಯವರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯನ್ನವಿಚಾರಣೆಗೆತ್ತಿಕೊಂಡಿರುವ ನ್ಯಾಯಪೀಠ, ಈ ಪ್ರಕರಣದಲ್ಲಿ ಮುಂದಿನ ಆದೇಶದ ತನಕ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.








