


ಬಳ್ಳಾರಿ: ಉಪನ್ಯಾಸಕನೊಬ್ಬ ತನ್ನ ಕಾಮದ ಹಸಿವಿಗಾಗಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ದ್ರೋಹ ಬಗೆದಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ವಿದ್ಯಾರ್ಥಿನಿಯ ಜೀವನದ ಜೊತೆ ಆಟವಾಡಿದ ಕಾಮುಕ ಉಪನ್ಯಾಸಕನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಬಳ್ಳಾರಿ ನಗರದ ಖಾಸಗಿ ಕಾಲೇಜೊಂದರ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಬಂಧಿತ ಆರೋಪಿಯಾಗಿದ್ದಾನೆ. ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನೇ ಈತ ಟಾರ್ಗೆಟ್ ಮಾಡಿದ್ದನು.
2025 ರಲ್ಲಿ ಉಪನ್ಯಾಸಕ ರವಿಕಿರಣ್ ಹಾಗೂ ವಿದ್ಯಾರ್ಥಿನಿ ನಡುವೆ ಕಾಲೇಜಿನಲ್ಲಿ ಪರಿಚಯವಾಗಿ ಸ್ನೇಹ ಬೆಳೆದಿದೆ. ಇಬ್ಬರ ನಡುವೆ ಸಲುಗೆ ಬೆಳೆಯುತ್ತಿದ್ದಂತೆ ವಿದ್ಯಾರ್ಥಿನಿಯ ಹೆತ್ತವರ ಮತ್ತು ಸಮಾಜದ ವಿರೋಧದ ನಡುವೆಯೂ, “ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ” ಎಂದು ನಂಬಿಸಿ, ಪದೇಪದೇ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.
ಉಪನ್ಯಾಸಕನ ಅಸಲಿ ಮುಖ ಮತ್ತು ಆತನಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿರುವ ಸತ್ಯ ತಡವಾಗಿ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿನಿ ಹಾಗೂ ಪೋಷಕರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೋಷಕರು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಪೋಷಕರು ನೀಡಿದ ಲಿಖಿತ ದೂರಿನ ಅನ್ವಯ ಪೋಕ್ಸೋಮತ್ತು ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬಳ್ಳಾರಿ ಮಹಿಳಾ ಠಾಣೆಯ ಪೊಲೀಸರು, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಕಾಮುಕ ರವಿಕಿರಣ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.








