ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ವ್ಯಾಪ್ತಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದು, ಆರೋಪಪಟ್ಟಿ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ನೀಡಲು ನ್ಯಾಯಾಲಯ ಒಪ್ಪಲಿಲ್ಲ. ವಿಶೇಷ ನ್ಯಾಯಾಲಯ ನೀಡಿದ್ದ ಕಾಲಾವಕಾಶವನ್ನು ಹೈಕೋರ್ಟ್ ರದ್ದುಪಡಿಸಿತು. ಆರೋಪಪಟ್ಟಿ ಸಲ್ಲಿಕೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿತು.
111 ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದು, ಇವರಲ್ಲಿ 90 ಆರೋಪಿಗಳಿಗೆ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಉಳಿದವರಿಗೆ ಹೈಕೋರ್ಟ್ ಇದೀಗ ಜಾಮೀನು ಮಂಜೂರು ಮಾಡಿತು.
ಘಟನೆಯ ಹಿನ್ನೆಲೆ’ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ 2020ರ ಆಗಸ್ಟ್ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು,
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು. ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು.