ಬೆಂಗಳೂರು: ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ ತಾರಕಕ್ಕೇರಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಖಂಡ ಶ್ರೀನಿವಾಸಮೂರ್ತಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನನ್ನ ಮನೆಗೆ ಬೆಂಕಿಹಾಕಿ ಕೆಡವಿದವರ ಪರ ಡಿ.ಕೆ.ಶಿವಕುಮಾರ್ ನಿಂತಿದ್ದಾರೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಹಲವು ಬಾರಿ ಮನವಿ ಮಾಡಿದರೂ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಓರ್ವ ಶಾಸಕನಾಗಿ ನಾವಿಂದು ಬೀದಿಯಲ್ಲಿರುವಂತಾಗಿದ್ದು, ನನ್ನ ಮನೆಗೆ ಬೆಂಕಿ ಹಾಕುವ ಸಂಚು ರೂಪಿಸಿದವರ ಪರ ಡಿಕೆಶಿ ನಿಂತಿದ್ದಾರೆ. ಡಿ.ಕೆ.ಶಿವಕುಮಾರ್ ನಡೆ ಬಗ್ಗೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೂ ಪತ್ರ ಬರೆಯುತ್ತೇನೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನನಗೆ ನ್ಯಾಯ ಕೊಡಿಸಲಿ ಎಂದು ಹೇಳಿದರು. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ರಾಜ್ಯದ ಸಿಎಂ ಆಗಬೇಕು. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಮಾತ್ರ 150 ಸೀಟ್ ಗೆಲ್ಲಲು ಸಾಧ್ಯ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರು ಅಷ್ಟೇ. ಜನ ಬೆಂಬಲ ಹಾಗೂ ಕಾಂಗ್ರೆಸ್ ನಾಯಕರ ಬೆಂಬಲ ಇರುವುದೂ ಕೂಡ ಸಿದ್ದರಾಮಯ್ಯನವರಿಗೆ ಮಾತ್ರ ಎಂದು ಹೇಳಿದರು.