ಬೆಂಗಳೂರು: ಕೋವಿಡ್ ಸೋಂಕು ಕಡಿಮೆ ಮಾಡಲು ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದ್ದು, ರಾಜ್ಯದಲ್ಲಿ ಒಂದು ತಿಂಗಳ ಕಾಲ ಲಾಕ್ ಡೌನ್ ವಿಸ್ತರಿಸಿ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಮೇ. 24 ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ, ಲಾಕ್ ಡೌನ್ ವಿಸ್ತರಿಸದಿದ್ದರೆ ದೊಡ್ಡ ದೊಡ್ಡ ಅನಾಹುತ ಆಗಲಿದೆ. ಹೀಗಾಗಿ ಲಾಕ್ ಡೌನ್ ವಿಸ್ತರಿಸುವುದು ಸೂಕ್ತ, ಲಾಕ್ ಡೌನ್ ಜೊತೆಗೆ ಸರ್ಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಸೋಂಕು ಕಡಿಮೆಯಾಗಿಲ್ಲ. ಕೋವಿಡ್ ಟೆಸ್ಟ್ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಸಾವು ನೋವುಗಳು ಹೆಚ್ಚಾಗುತ್ತವೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ಯಡವಟ್ಟು ಮಾಡುತ್ತೀರಿ. ಈಗಾಗಲೇ ಕೋವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದರು.











