ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಂಕಷ್ಟಕ್ಕೀಡಾಗಿರುವ ಜನರಿಗೆ ಕೂಡಲೇ ಸ್ಪಂದಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಮಳೆಯಿಂದ ಹಾನಿಯಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಆಸ್ತಿಪಾಸ್ತಿ ಹಾನಿ, ದನ ಕರುಗಳಿಗೆ ಆಹಾರ ಸಮಸ್ಯೆ ಆಗಿರುವುದು, ಜನಜೀವನ ಅಸ್ತವ್ಯಸ್ತಗೊಂಡಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವೆಬೆಕ್ಸ್ ಸಭೆ ನಡೆಸಿದರು.
ಈ ಸಭೆಯಲ್ಲಿ ಎಲ್ಲಾ ವಿಭಾಗ ಪ್ರಭಾರಿಗಳು, ಸಂಘಟನಾ ಕಾರ್ಯದರ್ಶಿಗಳು, ಜಿಲ್ಲಾ ಅಧ್ಯಕ್ಷರುಗಳು ಭಾಗವಹಿಸಿದ್ದು, ಜನರ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸಬೇಕು ಎಂದು ಹೇಳಿದರು.ಪರಿಹಾರ ಕೇಂದ್ರಗಳನ್ನು ತೆರೆಯುವ ಮೂಲಕ ಪರಿಹಾರ ಕಾರ್ಯದಲ್ಲಿ ತಕ್ಷಣವೇ ತೊಡಗಿಸಿಕೊಳ್ಳಬೇಕು. ಈ ಪರಿಹಾರ ಕಾರ್ಯದಲ್ಲಿ ಸಂಸದರು, ಶಾಸಕರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರು ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಅಲ್ಲದೇ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಈ ಪ್ರವಾಹ ಪೀಡಿತರ ನೆರವಿನ ಕೆಲಸದಲ್ಲಿ ನಿರತರಾಗಬೇಕು ಎಂದು ಸೂಚನೆ ನೀಡಿದರು.