ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಆತನ ಸಂಬಂಧಿಕನಿಗೆ ಚಾಕುವಿನಿಂದ ಇರಿದ ಘಟನೆ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ಗಂಭೀರವಾಗಿ ಗಾಯಗೊಂಡಿದ್ದು, ಸಂಬಂಧಿ ಕೊಲೆಯಾಗಿ ಹೋಗಿದ್ದಾನೆ.
ವಿಕ್ರಂ ಎಂಬಾತನೇ ಸಾವನ್ನಪ್ಪಿದ್ದ ದುರ್ದೈವಿ. ಸಹಕಾರ ನಗರದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ಸುರೇಶ್ ಹಾಗೂ ವಿಕ್ರಂ ಕಚೇರಿಯಲ್ಲಿದ್ದರು. ಈ ವೇಳೆಯಲ್ಲಿ ಇನೋವಾ ಕಾರಿನಲ್ಲಿ ಬಂದ 6 ದುಷ್ಕರ್ಮಿಗಳು, ಇಬ್ಬರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವಿಕ್ರಂ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಸುರೇಶ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದುಷ್ಕರ್ಮಿಗಳು ಆಂಧ್ರಪ್ರದೇಶ ನೋಂದಣಿಯ ಕಾರಿನಲ್ಲಿ ಬಂದಿದ್ದು, ಸ್ಥಳದಲ್ಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ವ್ಯವಹಾರದ ವಿಚಾರದಲ್ಲಿಯೇ ಈ ಕೃತ್ಯ ನಡೆದಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತು ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.