ಬೆಂಗಳೂರು(ನ.3): ರಾಜ್ಯದಲ್ಲಿ ಶಾಲಾ ಕಾಲೇಜುಗಳ ಆರಂಭದ ಬಗ್ಗೆ ಮೂರು ದಿನ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ಈಗಾಗಲೇ ನಿರ್ಧರಿಸಲಾಗಿದ್ದು. ಶಾಲೆಗಳನ್ನು ಪ್ರಾರಂಭಿಸುವುದರ ಬಗ್ಗೆ ನವೆಂಬರ್ 02 ರಂದು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿತ್ತು.ತಾಂತ್ರಿಕ ಕಾರಣಗಳಿಂದ ಸಭೆ ರದ್ದಾಗಿದ್ದು. ನ.4ರಿಂದ ಸತತ ಮೂರು ದಿನಗಳ ಎಲ್ಲಾ ಜಿಲ್ಲಾ ಉಪನಿರ್ದೇಶಕರುಗಳು ತಾಲೂಕು ಶಿಕ್ಷಣಾಧಿಕಾರಿಗಳ ಜತೆ ಸಭೆ ನಡೆಸಿ ಶಾಲಾ ಕಾಲೇಜುಗಳ ಪ್ರಾರಂಭದ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು, ಅದೇ ಮಾದರಿಯಲ್ಲಿ ನಮ್ಮಲ್ಲೂ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಶಾಲಾ- ಕಾಲೇಜು ಗಳನ್ನು ಪ್ರಾರಂಭಿಸಬೇಕೆಂಬ ಚರ್ಚೆ ಆರಂಭವಾಗಿದೆ. ಶಿಕ್ಷಣ ತಜ್ಞರು, ಆರೋಗ್ಯ ತಜ್ಞರು ಹಂತ-ಹಂತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸಬಹುದೆಂಬ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಶಾಲೆಗಳನ್ನು ಪ್ರಾರಂಭ ಮಾಡಿದ್ದು ಶಿಕ್ಷಕರು ಮತ್ತು ಸಿಬ್ಬಂದಿಗೆ ಶಾಲೆಗೆ ಬರಲು ಸೂಚಿಸಿದೆ. ಸಾಧಕ- ಬಾಧಕಗಳನ್ನು ನೋಡಿಕೊಂಡು ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿಕೊಳ್ಳುವ ಚಿಂತನೆ ನಡೆಸಿದೆ.ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಈ ಕುರಿತು ಹೇಳಿಕೆ ನೀಡಿದ್ದು. ಶಾಲೆಗಳಲ್ಲಿ ಸ್ವಚ್ಛತೆ, ಸುರಕ್ಷತೆ ನೋಡಿಕೊಂಡು ಶಾಲೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಶಾಲಾ ಶಿಕ್ಷಕರು, ಸಿಬ್ಬಂದಿ ಮಕ್ಕಳ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಶಾಲೆಗಳನ್ನು ಪ್ರಾರಂಭ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಕೊರೋನಾ ಹರಡುವಿಕೆ ನಿಯಂತ್ರಣದಲ್ಲಿದ್ದರೆ ರಾಜ್ಯದಲ್ಲಿ ಡಿಸೆಂಬರ್ ಎರಡನೇ ವಾರದಲ್ಲಿ ಶಾಲೆ ಆರಂಭವಾಗುವ ಸಾಧ್ಯತೆಯಿದೆ.ಪರ್ಯಾಯ ದಿನ ಆಧಾರದಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಪಾಠ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.
