ಬೆಂಗಳೂರು: ಇಂದಿನಿಂದ ಜೂನ್ 7ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನ ಮತ್ತೊಂದು ಹಂತ ಆರಂಭವಾಗಿದ್ದು, ಟಫ್ ರೂಲ್ಸ್ ಜಾರಿಯಾಗಿದೆ. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ಲಾಕ್ ಡೌನ್ ಜಾರಿಯಾಗಿದೆ. ಆಯಾ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ. ಈಗಾಗಲೇ 3-4 ದಿನಗಳ ಲಾಕ್ ಡೌನ್ ಇರುವ ಜಿಲ್ಲೆಗಳಲ್ಲಿ ನಿಯಮಗಳನ್ನು ಸೂಕ್ತವಾಗಿ ಪಾಲಿಸಲಾಗುತ್ತಿದೆ. ಉಳಿದ ಜಿಲ್ಲೆಗಳಲ್ಲೂ ಅನಗತ್ಯವಾಗಿ ವಾಹನಗಳಲ್ಲಿ ಸಂಚರಿಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ವಾಹನಗಳನ್ನು ಸೀಜ್ ಮಾಡಿ, ವಶಕ್ಕೆ ಪಡೆಯಲಾಗುತ್ತಿದೆ. ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ, ಹಲವು ರಸ್ತೆಗಳಲ್ಲಿ ಒನ್ ವೇ ನಿಯಮ ಜಾರಿಗೆ ಹೇಳಲಾಗಿದೆ ಎಂದರು.
ಗೃಹ ಸಚಿವರ ಸೂಚನೆ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಅನಗತ್ಯವಾಗಿ ತಿರುಗಾಡುವವರನ್ನು ವಶಕ್ಕೆ ಪಡೆಯುತ್ತಿದ್ದಾರೆ. ಬೆಳಿಗ್ಗೆಯಿಂದ ಈವರೆಗೆ 700 ವಾಹನಗಳನ್ನು ಸೀಜ್ ಮಾಡಲಾಗಿದ್ದು, 200ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.