




ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಕೆಲಸದ ವಿಚಾರದಲ್ಲಿ ಉಂಟಾದ ತಕರಾರು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಬಿಯರ್ ಬಾಟಲಿಯಿಂದ ಕುತ್ತಿಗೆಗೆ ತಿವಿದ ಪರಿಣಾಮ ಮಧುಸೂದನ(37) ಮೃತಪಟ್ಟಿದ್ದಾರೆ.
ಪಿಲಾತಬೆಟ್ಟು ನಿವಾಸಿ ಶೇಖರ (43) ನೀಡಿದ ದೂರಿನ ಪ್ರಕಾರ, ಮೇ 31ರಂದು ರಾತ್ರಿ ಅವರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅವರ ಸಹೋದರ ಮಧುಸೂದನ ಹಾಗೂ ಸಂಬಂಧಿಕ ರಾಹುಲ್ ನಡುವೆ ಕೆಲಸದ ವಿಚಾರವಾಗಿ ವಾಗ್ವಾದ ನಡೆದಿತ್ತು. ಇದರಿಂದ ಕೋಪಗೊಂಡ ರಾಹುಲ್ ಅಲ್ಲಿಂದ ತೆರಳಿದ್ದಾನೆ.
ಕಾರ್ಯಕ್ರಮ ಮುಗಿದ ಬಳಿಕ ಮನೆಯ ಸಮೀಪ ಗಲಾಟೆಯ ಶಬ್ದ ಕೇಳಿಬಂದಿದ್ದು, ಸ್ಥಳಕ್ಕೆ ತೆರಳಿದಾಗ ರಾಹುಲ್ ಬಿಯರ್ ಬಾಟಲಿಯಿಂದ ಮಧುಸೂದನ ಅವರ ಕುತ್ತಿಗೆಗೆ ತಿವಿದಿರುವುದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಮಧುಸೂದನ ಅವರನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 58/2026 ಕಲಂ: 103 ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿ ರಾಹುಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ..








