


ಬಂಟ್ವಾಳ ತಾಲೂಕಿನ ಸಜೀಪ ಎಂಬಲ್ಲಿ ಇಬ್ಬರು ಯುವಕರನ್ನು ಅಪರಿಚಿತ ವ್ಯಕ್ತಿಗಳು ಬೆನ್ನಟ್ಟಿ ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.
ದಿನಾಂಕ: 20-06-2025 ನೇ ಶುಕ್ರವಾರದಂದು ರಾತ್ರಿ ಸುಮಾರು 10 ಗಂಟೆಯ ವೇಳೆಗೆ, ಮೊಹಮ್ಮದ್ ಮುಕ್ಬುಲ್ (34) ಎಂಬವರು ಸಂಬಂಧಿಯೊರ್ವರ ಸ್ಕೂಟರ್ ನಲ್ಲಿ ಸಹಪ್ರಯಾಣಿಕರಾಗಿ ಕುಳಿತು ಬೊಳ್ಯಾರ್ ಕಡೆಯಿಂದ ಮೆಲ್ಕಾರ್ ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಾ, ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ, ಅಲ್ಲಿ ಬೊಳ್ಯಾರ್ ಕಡೆಗೆ ಮುಖಮಾಡಿ ನಿಲ್ಲಿಸಿದ್ದ ಸ್ಕೂಟರ್ ನಲ್ಲಿ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಕುಳಿತಿದ್ದು, ಅವರ ಪೈಕಿ ಓರ್ವ ವ್ಯಕ್ತಿ ದೂರುದಾರರು ತೆರಳುತ್ತಿದ್ದ ಸ್ಕೂಟರ್ ಕಡೆಗೆ ಓಡಿ ಬಂದಿದ್ದು, ಆ ವೇಳೆ ಆತನ ಕೈಯಲ್ಲಿ ತಲವಾರು ಅಥವಾ ಯಾವುದೇ ಮಾರಕಾಯುಧವನ್ನು ಮುಕ್ಬುಲ್ ನೋಡಿರುವುದಿಲ್ಲ. ವ್ಯಕ್ತಿ ಓಡಿ ಬರುತ್ತಿರುವುದನ್ನು ಗಮನಿಸಿ ಸ್ಕೂಟರ್ ಚಾಲನೆ ಮಾಡುತ್ತಿದ್ದ ತನ್ನ ಸಂಬಂಧಿಕನಲ್ಲಿ ವೇಗವಾಗಿ ಹೋಗುವಂತೆ ತಿಳಿಸಿದ್ದು, ಆ ಬಳಿಕ ಹಿಂತಿರುಗಿ ನೋಡದೇ ಮನೆಗೆ ತೆರಳಿ ತನ್ನ ತಂದೆಗೆ ಘಟನೆಯ ಬಗ್ಗೆ ತಿಳಿಸಿರುತ್ತಾರೆ. ವಾಟ್ಸಾಪ್ ಗಳಲ್ಲಿ ಪ್ರಸಾರವಾಗುತ್ತಿರುವ ತಲವಾರು ದಾಳಿ ಎಂಬ ಸುಳ್ಳುಸುದ್ದಿಗಳಿಗೂ ತನಗೂ ಯಾವುದೇ ಸಂಬಂಧ ಇರುವುದಿಲ್ಲ ಹಾಗೂ ತಾನು ಸ್ಥಳದಲ್ಲಿ ಜನರನ್ನು ಜಮಾವಣೆಗೊಳಿಸಿರುವುದಿಲ್ಲ ಎಂಬುದಾಗಿ ವಿಚಾರಣೆಯ ವೇಳೆ ತಿಳಿಸಿದ್ದಾರೆ. ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 73/2025, u/s 125 BNS ರಂತೆ ಪ್ರಕರಣ ದಾಖಲಿಸಲಾಗುತ್ತಿದ್ದು, ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಘಟನಾಸ್ಥಳಕ್ಕೆ ಪಿ.ಎಸ್.ಐ ರವರು ಧಾವಿಸಿದಾಗ, ಅಲ್ಲಿ ನೆರೆದಿದ್ದ ಕೆಲವರು ಕಳೆದ ವಾರ ಬಕ್ರೀದ್ ಸಮಯದಲ್ಲಿ ಸಜಿಪನಡುವಿನಲ್ಲಿ ಸಾಗಿಸುತ್ತಿದ್ದ ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಆದರೆ ಕಳೆದ ವಾರದಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂಬುದಾಗಿ ಕೇಳಿರುತ್ತಾರೆ. ಕಳೆದ ವಾರದಲ್ಲಿ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಹಾಗೂ ಬಕ್ರೀದ್ ಸಮಯದಲ್ಲಿ ಹಸುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೂ ಯಾವ ರೀತಿ ಸಂಬಂಧ ಇರುತ್ತದೆ ಎಂಬ ಆಯಾಮದಲ್ಲೂ ಪರಿಶೀಲಿಸಲಾಗುತ್ತಿದೆ.