


ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಬಂಟ್ವಾಳ ತೆಂಕಕಜೆಕಾರು ನಿವಾಸಿ, ಅವ್ವಮ್ಮ (82) ಅವರ ಮೊಮ್ಮಗ ಶಬೀರ್ (33) ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿಯಿಂದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಂಡಿದ್ದಾರೆ.
ದಿನಾಂಕ 14.08.2026 ರಂದು ದೂರುದಾರರ ತಾಯಿ ಅವ್ವಮ್ಮ(82) ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ ಸುತ್ತಿದ ಅಪರಿಚಿತ ವ್ಯಕ್ತಿಯೊಬ್ಬರು ಮನೆಗೆ ನುಗ್ಗಿ, ಅವರ ಎರಡು ಕೈಯಲ್ಲಿದ್ದ ಸುಮಾರು 40 ಗ್ರಾಂ ತೂಕದ, 5,00,000 ರೂ. ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಕಿತ್ತುಕೊಂಡು ಹೋಗಿದ್ದರು. ಈ ವೇಳೆ ವೃದ್ಧೆಯ ಕೈಗೆ ರಕ್ತಗಾಯವಾಗಿತ್ತು.
ಈ ಬಗ್ಗೆ ಸಾದಿಕ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಠಾಣಾ ಅ.ಕ್ರ: 70/2026, ಕಲಂ: 309(6) BNS-2023 ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ, ತನಿಖೆಯ ವೇಳೆ ದಿನಾಂಕ 16.08.2026 ರಂದು ಅವ್ವಮ್ಮ ಅವರ ಮೊಮ್ಮಗ ಬಂಟ್ವಾಳ ತೆಂಕಕಜೆಕಾರು ನಿವಾಸಿ ಶಬೀರ್(33) ಈ ಕೃತ್ಯ ಎಸಗಿರುವುದು ತಿಳಿದುಬಂದಿದೆ.
ಪೊಲೀಸರು ಶಬೀರ್ನನ್ನು ಬಂಧಿಸಿ, ಆತನಿಂದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ವಿಚಾರಣೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದ ಆರೋಪಿಯ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕರಾದ ಶ್ರೀಮತಿ ರೋಹಿಸಣಿ ಸಿ.ಕೆ ರವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಪುಂಜಾಲಕಟ್ಟೆ ಠಾಣಾ ಪಿ.ಎಸ್.ಐ ರಾಜೇಶ್ ಕೆ.ವಿ, ಸಿಬ್ಬಂದಿಗಳಾದ ಎ ಎಸ್ ಐ ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್, ಸತೀಶ್ ರವರು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ರವರು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








