ಬಂಟ್ವಾಳ: ಬೆಂಜನಪದವಿನಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿರ್ದೇಶನದಂತೆ ಬಂಟ್ವಾಳ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
ಬಳಿಕವೂ ಗಣಿಗಾರಿಕೆ ಮುಂದುವರಿಸಿದ ಬಗ್ಗೆ ಸಾರ್ವಜನಿಕರು ದೂರಿಕೊಂಡ ಹಿನ್ನೆಲೆಯಲ್ಲಿ ಇಂದು ಮತ್ತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಹಾಗೂ ತಾಲೂಕು ತಹಸೀಲ್ದಾರ್ ರಶ್ಮಿ ಎಸ್.ಆರ್. ರವರು ಜಂಟಿಯಾಗಿ ದಿಢೀರ್ ದಾಳಿ ನಡೆಸಿ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಸಿದ್ದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ಸಂದರ್ಭ 2 ಟಿಪ್ಪರ್, 1 ಹಿಟಾಚಿ, 2 ಬೃಹತ್ ಗಾತ್ರದ ಕಲ್ಲು ಕತ್ತರಿಸುವ ಯಂತ್ರ, 3 ಟಿಲ್ಲರ್ ಸಹಿತ ಕೋಟ್ಯಾಂತರ ರೂ. ಮೌಲ್ಯದ ಯಂತ್ರೋಪಕರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಮ್ಮುಂಜೆ ಗ್ರಾಮದಲ್ಲಿ ಒಟ್ಟು 5 ಕಡೆಗಳಲ್ಲಿ ಈ ರೀತಿಯ ಅನಧೀಕೃತ ಗಣಿಗಾರಿಕೆ ನಡೆದಿರುವುದು ಕಂಡು ಬಂದಿದೆ.