ಬೆಳ್ತಂಗಡಿ: ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ₹ 82 ಲಕ್ಷ ವೆಚ್ಚದಲ್ಲಿ ರಾಜ್ಯ ಸರ್ಕಾರದ ವಿಶೇಷ ಅನುದಾನದಿಂದ ನಿರ್ಮಾಣವಾಗಲಿರುವ ಆಮ್ಲಜನಕ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ರಾಜ್ಯದಲ್ಲಿ 31 ಆಮ್ಲಜನಕ ಘಟಕಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಆಸ್ಪತ್ರೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುವುದು. ಇಲ್ಲಿನ ಘಟಕಕ್ಕೆ ಕೊಯಮತ್ತೂರಿಂದ ಟ್ರೈಡೆಂಟ್ ಕಂಪನಿ ಯಂತ್ರೋಪಕರಣ ಸರಬರಾಜು ಮಾಡಲಿದೆ. ಇಲ್ಲಿ ₹ 82 ಲಕ್ಷ ವೆಚ್ಚದಲ್ಲಿ 500 ಚದರ ಅಡಿಯ ಹೊಸತಾದ ಕಟ್ಟಡದಲ್ಲಿ ಒಂದು ನಿಮಿಷದಲ್ಲಿ 390 ಲೀಟರ್ ಆಮ್ಲಜನಕ ಉತ್ಪಾದಿಸುವ ಘಟಕ ಇದಾಗಿದೆ’ ಎಂದು ಹೇಳಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ‘ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ ಸಹಕಾರದಿಂದ ಮುಖ್ಯಮಂತ್ರಿ, ಆರೋಗ್ಯ ಸಚಿವ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕನ ನಿರ್ಮಿಸಲು ಅನುಮೋದನೆ ಕೊಟ್ಟಿದ್ದಾರೆ. ಶೀಘ್ರದಲ್ಲಿ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಘಟಕ ಸ್ಥಾಪನೆ ಮಾಡಿ, ಲೋಕಾರ್ಪಣೆ ಮಾಡಲಾಗುವುದು’ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರ್ ಇ.ಪಿ.ಶೆಟ್ಟಿ, ಸಹಾಯಕ ಎಂಜಿನಿಯರ್ಗಳಾದ ರಾಜೇಶ್ ರೈ, ಗೋಪಾಲಕೃಷ್ಣ, ತಹಶೀಲ್ದಾರ್ ಮಹೇಶ್ ಜೆ., ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಲಾಮಧು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್, ಆಡಳಿತ ವೈದ್ಯಾಧಿಕಾರಿ ಡಾ.ವಿದ್ಯಾವತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಆರೋಗ್ಯ ಇಲಾಖೆ ಸಹಾಯಕ ಅಜಯ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ತುಕರಾಮ್, ಇಲಾಖಾ ಸಿಬ್ಬಂದಿ, ನಗರ ಪಂಚಾಯಿತಿ ಸದಸ್ಯರು, ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಇದ್ದರು.