ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ಧಿಗಳನ್ನು ಹರಡಿಸಿ ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡಿದರವರ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಸಾಮಾಜಿಕ ಜಾಲ ತಾಣಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ಇವರು ಬೆಳಿಗ್ಗೆ ಸಾಮಾಜಿಕ ಜಾಲತಾಣವನ್ನು ನೋಡಿದಾಗ ಫೇಸ್ ಬುಕ್ನಲ್ಲಿ ” ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಂಮರ ಓಟು ಸಾಕು: ಸಿದ್ದರಾಮಯ್ಯ” ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ, ಎಂದು ಯಾವುದೋ ಪತ್ರಿಕೆಯಲ್ಲಿ ಪ್ರಕಟವಾಗಿರುವ ಸುದ್ದಿಯಂತೆ ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು ಹರಡಿಸಿ ಜಾತಿ ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡುವ ಈ ರೀತಿಯ ಪೋಸ್ಟ್ಗಳನ್ನು ಹರಿಯಬಿಟ್ಟಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ತಾಲೂಕಿನ ಜಯಂತ ಹಾಗೂ ಸಂದೀಪ್ ಕುಮಾರ್ ಎಂಬವರ ವಿರುದ್ಧ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಸಾಮಾಜಿಕ ಜಾಲ ತಾಣಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಕಾರ್ಯಕ್ರಮದಲ್ಲಿ ಈ ರೀತಿ ಮಾತನಾಡಿರುವುದಿಲ್ಲ. ಮತ್ತು ರಾಜ್ಯದ ಯಾವುದೇ ಪತ್ರಿಕಾ ಮಾಧ್ಯಮಾಗಳು ಇಂತಹ ವರದಿ ಮಾಡಿರುವುದಿಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಘನತೆ ಗೌರವಕ್ಕೆ ಧಕ್ಕೆ ಬರುವಂತೆ ಹಾಗೂ ಧರ್ಮ ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಿ ಸಮಾಜದಲ್ಲಿ ಶಾಂತಿಭಂಗ ಉಂಟುಮಾಡಿ ಸಮಾಜದಲ್ಲಿ ಜುನಾವಣಾ ಸಂದರ್ಭದಲ್ಲಿ ಗಲಭೆ ಉಂಟುಮಾಡುವ ಹುನ್ನಾರದಿಂದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ನಾಡಿನ ಮತದಾರರನ್ನು ದಾರಿ ತಪ್ಪಿಸಲು ಈ ರೀತಿ ಸುಳ್ಳು ಸುದ್ದಿಯನ್ನು ಹರಡಿರುತ್ತಾರೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.