

ಬೆಳ್ತಂಗಡಿ: ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನನ್ನು ಅವಮಾನ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂದು ಗುರುತಿಸಲಾಗಿದೆ.
ಮುಹಮ್ಮದ್ ಹಾಯಿಫ್ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಮೂವರು ಪಡ್ಡೆ ಯುವಕರು ಆತನನ್ನು ತಡೆದು ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದಿದ್ದಾರೆ. ಜೊತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.
ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆ ಬಗ್ಗೆ ಸಾರ್ವಜನಿಕರು ಈ ಮೂವರು ಪಡ್ಡೆ ಯುವಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.