Tuesday, July 21, 2026
spot_imgspot_img
spot_imgspot_img

ಬೆಳ್ತಂಗಡಿ : ಧನು ಪೂಜೆಗೆಂದು ಹೋದ ಬಾಲಕ ಶವವಾಗಿ ಪತ್ತೆ!

- Advertisement -
- Advertisement -

ಬೆಳ್ತಂಗಡಿ: ಧನು ಪೂಜೆಗೆ ಹೋದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಜ.14ರಂದು ಬುಧವಾರ ಬೆಳಿಗ್ಗೆ ನಡೆದಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ-ಬರಮೇಲು ಪ್ರದೇಶದಲ್ಲಿ ನಡೆದಿದೆ.ಈ ಅಸಹಜ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ.

ಸುಮಂತ್ ಸೇರಿದಂತೆ ಮೂವರು ಬಾಲಕರು ಪ್ರತಿದಿನ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ತೆರಳುತ್ತಿದ್ದರು. ಜ.14ರಂದು ಮುಂಜಾನೆ 4 ಗಂಟೆ ಸುಮಾರಿಗೆ ಸುಮಂತ್ ಮನೆಯಿಂದ ಹೊರಟಿದ್ದಾನೆ. ಆದರೆ ಆತ ನಿರ್ದಿಷ್ಟ ಸಮಯಕ್ಕೆ ದೇವಸ್ಥಾನಕ್ಕೆ ತಲುಪದ ಕಾರಣ, ಇತರ ಇಬ್ಬರು ಬಾಲಕರು ಆತನಿಗಾಗಿ ಕಾಯದೆ ದೇವಸ್ಥಾನಕ್ಕೆ ತೆರಳಿದ್ದರು. ನಂತರ ಸಂಶಯಗೊಂಡ ಬಾಲಕರು ಸುಮಂತ್ ಮನೆಯವರಿಗೆ ಕರೆ ಮಾಡಿದಾಗ, ಆತ ಮುಂಜಾನೆಯೇ ದೇವಸ್ಥಾನಕ್ಕೆ ಹೋಗಿದ್ದಾನೆ ಎಂದು ಮನೆಯವರು ತಿಳಿಸಿದ್ದಾರೆ. ಆದರೆ ಸುಮಂತ್ ದೇವಸ್ಥಾನಕ್ಕೆ ಬಂದಿಲ್ಲ ಎಂಬ ಮಾಹಿತಿ ತಿಳಿದ ಬಳಿಕ ಕುಟುಂಬಸ್ಥರು ಆತಂಕಗೊಂಡು ಸ್ಥಳೀಯರಿಗೆ ವಿಷಯ ತಿಳಿಸಿದರು. ಬಾಲಕ ಬರುವ ದಾರಿಯ ಸಮೀಪದ ಕೆರೆಯ ಬಳಿ ರಕ್ತದ ಕಲೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು, ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಕೊನೆಗೆ ಸುಮಾರು 11.30 ರ ವೇಳೆಗೆ ಸುಮಂತ್‌ನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಬಾಲಕನ ತಲೆಯ ಭಾಗದಲ್ಲಿ ಗಂಭೀರ ಗಾಯಗಳಿರುವುದು ಕಂಡುಬಂದಿದ್ದು, ಸಾವಿನ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿವೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!