




ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್ ಟಿ ಸಿ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ. ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.
ಇವರಿಬ್ಬರು ಇಂದು ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.








