



ಬೆಂಗಳೂರು: ಮಗು ಬೇಡವೆಂಬ ಕಾರಣಕ್ಕೆ 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.
ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮೃತಪಟ್ಟಿದ್ದಾಳೆ ಎಂದು ಭಾವಿಸಿದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೆಲ ಗಂಟೆಗಳ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಈ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಸೀನಾ (35 ) ಗಾಯಗೊಂಡ ಮಹಿಳೆ. ಆರೋಪಿ ಪತಿ ಮಹಮ್ಮದ್ ಫಿರ್ (40) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಫಿರ್ ಮತ್ತು ಹಸೀನಾ ಸುಮಾರು 15 ವರ್ಷಗಳಿಂದ ಪರಸ್ಪರ ಪರಿಚಯ ಹೊಂದಿದ್ದು, ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಫಿರ್ಗೆ ಮೊದಲೇ ಮದುವೆಯಾಗಿತ್ತು. ಅದಲ್ಲದೆ ಮಗು ಬೇಡವೆಂಬ ಕಾರಣಕ್ಕೆ ಈ ಹಿಂದೆ ಎರಡು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಮೂರನೇ ಬಾರಿಯೂ ಹಸೀನಾ ಗರ್ಭಿಣಿಯಾಗಿದ್ದರಿಂದ ಆಕೆಯ ಮೇಲೆ ಆರೋಪಿ ಹಲವು ಬಾರಿ ಹಲ್ಲೆ ಮಾಡಿದ್ದಾನೆ. ನಿನ್ನೆ ಮಧ್ಯಾಹ್ನ ಹಸೀನಾ ಮಲಗಿದ್ದ ವೇಳೆ ದುಪ್ಪಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಸುಮಾರು ಮೂರುರಿಂದ ನಾಲ್ಕು ಗಂಟೆಗಳ ಬಳಿಕ ಹಸೀನಾಗೆ ಪ್ರಜ್ಞೆ ಬಂದಿದೆ. ಕೂಡಲೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಅವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಕುಟುಂಬದವರು ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.








